ಬೆಂಗಳೂರು: ‘ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಭ್ರಷ್ಟಾಚಾರ ಮತ್ತು ಕುಟುಂಬ ರಾಜಕೀಯದ ವಿರುದ್ಧ ನನ್ನ ಹೋರಾಟ ನಿರಂತರ ಮುಂದುವರಿಯಲಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಮಾತ್ರವಲ್ಲ, ಅವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಎಲ್ಲ ವರ್ಗಾವಣೆ ಮುಖ್ಯಮಂತ್ರಿ ಮನೆಯಿಂದಲೇ ಆಗುವುದು. ಅದಲ್ಲದೆ, ‘ಡಿ’ ಗ್ರೇಡ್ ವರ್ಗಾವಣೆ ಸಮೇತ ಮುಖ್ಯಮಂತ್ರಿ ಕುಟುಂಬದಿಂದಲೇ ಆಗಬೇಕು. ಅಷ್ಟು ಭ್ರಷ್ಟಾಚಾರದಲ್ಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ತೊಡಗಿದೆ’ ಎಂದು ಗಂಭೀರ ಆರೋಪ ಮಾಡಿದರು.
‘ನಾನು ಯಾರ ಏಜೆಂಟೂ ಅಲ್ಲ. ಬಿಜೆಪಿ ಕಾರ್ಯಕರ್ತ. ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗ. ಯಾರ ಪರವಾಗಿ ನಿಲ್ಲಲು ನನಗೆ ಹುಚ್ಚು ಹಿಡಿದಿಲ್ಲ’ ಎಂದೂ ಯತ್ನಾಳ್ ಹೇಳಿದರು.
‘ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡಿರುವುದರಿಂದ ನ್ಯಾಯ ಸಿಗಲ್ಲ. ಮುಖ್ಯಮಂತ್ರಿ ಮತ್ತು ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಹಿಡಿತದಲ್ಲಿದೆಎಸ್ಐಟಿ. ಹೀಗಾಗಿ, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತೇನೆ’ ಎಂದರು.
‘ಸಿ.ಡಿ ಹಿಂದೆ ಕೇವಲ ಕಾಂಗ್ರೆಸ್ ನಾಯಕರು ಮಾತ್ರವಲ್ಲ, ಬಿಜೆಪಿ ನಾಯಕರ ಕೈವಾಡ ಇದ್ದರೂ ಇರಬಹುದು’ ಎಂದು ಆರೋಪಿಸಿದ ಯತ್ನಾಳ್, ‘ಪತ್ರಕರ್ತನ ಪುತ್ರಿ ಜನ್ಮದಿನ ಕಾರ್ಯಕ್ರಮಕ್ಕೆ ಕೇವಲ ಕಾಂಗ್ರೆಸ್ ಮುಖಂಡರು ಮಾತ್ರವಲ್ಲ, ಬಿಜೆಪಿ ನಾಯಕರೂ ಹೋಗಿದ್ದರು. ಅವರ ಫೋಟೊಗಳನ್ನು ಬಿಡುಗಡೆ ಮಾಡಬೇಕು.ಕಾರ್ಯಕ್ರಮಕ್ಕೆ ಯಾರೆಲ್ಲ ಹೋಗಿದ್ದರು ಎಂಬುದನ್ನೂ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.