ADVERTISEMENT

ಯಾವುದೇ ರೀತಿಯ ಲಾಕ್‌ಡೌನ್ ಮಾಡುವುದಿಲ್ಲ: ಯಡಿಯೂರಪ್ಪ ಹೇಳಿಕೆ

ಇನ್ನು 15 ದಿವಸ ಪ್ರತಿಭಟನೆ, ಧರಣಿಗಳಿಗೆ ಅವಕಾಶವಿಲ್ಲ: ಸಿಎಂ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 14:10 IST
Last Updated 29 ಮಾರ್ಚ್ 2021, 14:10 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ರಾಜ್ಯದ ವಿವಿಧೆಡೆ ಮತ್ತು ಬೆಂಗಳೂರು ನಗರದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಂಬಂಧಪಟ್ಟ ಇಲಾಖೆಗಳ ಅ‌ಧಿಕಾರಿಗಳ ಸಭೆ ನಡೆಸಿದ್ದಾರೆ.

ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ದಿನಾಂಕ 29-3-2021ರಂದು ನಡೆದ ಸಭೆಯ ಮುಖ್ಯಾಂಶಗಳು ಇಲ್ಲಿವೆ.

ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಲಾಯಿತು.

ADVERTISEMENT

ಬೆಂಗಳೂರಿನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಪಾಸಿಟಿವಿಟಿ ರೇಟ್ 0.94% ಇದ್ದು ಮಾರ್ಚ್ ತಿಂಗಳಲ್ಲಿ 1.94% ಕ್ಕೆ ಹೆಚ್ಚಿದೆ.

ಪ್ರಸ್ತುತ 15,882 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ 6.61 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ.

ನಿಗದಿತ ಗುರಿಗಿಂತ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಶೇ. 90 ಕ್ಕೂ ಹೆಚ್ಚು ಆರ್‌ಟಿಪಿಸಿಆರ್ ಪರೀಕ್ಷೆಗಳನ್ನೇ ನಡೆಸಲಾಗುತ್ತಿದೆ.

ನಗರದಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ನಿರ್ವಹಿಸಲು ಸರ್ಕಾರ, ಬಿಬಿಎಂಪಿ ಎಲ್ಲ ರೀತಿಯಲ್ಲೂ ಸಜ್ಜಾಗಿದ್ದು ಈಗಾಗಲೇ ಹೆಚ್.ಎ.ಎಲ್. ಮತ್ತು ಹಜ್ ಭವನಗಳಲ್ಲಿ ತಲಾ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ.

ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿಯೂ 250 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಏಪ್ರಿಲ್ 5 ರಿಂದ ಕಾರ್ಯಾರಂಭ ಮಾಡಲು ಸಜ್ಜುಗೊಳಿಸಲಾಗುತ್ತಿದೆ.

ಕೋವಿಡ್ ಪರೀಕ್ಷೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಪ್ರತಿ ವಾರ್ಡಿನಲ್ಲಿ 2 ಮೊಬೈಲ್ ಮತ್ತು 1 ಸ್ಟಾಟಿಕ್ ತಂಡಗಳನ್ನು ನಿಯೋಜಿಸಲಾಗಿದೆ.

ಸಂಪರ್ಕಿತರ ಪತ್ತೆಗೆ ಕಂದಾಯ, ಶಿಕ್ಷಣ ಇಲಾಖೆ ಸಿಬ್ಬಂದಿಯನ್ನೂ ಬಳಸಿಕೊಳ್ಳಲಾಗುತ್ತಿದೆ. ಸಂಪರ್ಕಿತರ ಪತ್ತೆಯ ಗುರಿಯನ್ನು ಸಹ 30ಕ್ಕೆ ಹೆಚ್ಚಿಸಲು ಸೂಚಿಸಲಾಗಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ 1166 ಬೆಡ್‍ಗಳನ್ನು ಮೀಸಲಿಡಲಾಗಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಹಾಸಿಗೆಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು. ಖಾಸಗಿ ಆಸ್ಪತ್ರೆಗಳೂ ಸಹಕರಿಸುವಂತೆ ಹಾಗೂ ಕೋವಿಡ್ ಚಿಕಿತ್ಸೆಗೆ ಹಾಸಿಗೆಗಳನ್ನು ಒದಗಿಸಲು ಸಿದ್ಧರಿರುವಂತೆ ತಿಳಿಸಲಾಗಿದೆ.

ಬಿಬಿಎಂಪಿ ಎಂಟು ವಲಯಗಳಿಗೆ ಹಿರಿಯ ಅಧಿಕಾರಿಗಳನ್ನು ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ.

ಕೋವಿಡ್ ನಿರ್ವಹಣೆಗೆ ಅನುದಾನದ ಯಾವುದೇ ಕೊರತೆ ಇಲ್ಲ. ಈಗಾಗಲೇ 150 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯ ಬಿದ್ದಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು.

ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಕಡ್ಡಾಯ. ಪ್ರಯಾಣಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಕೋರಿದೆ.

ಸಾರ್ವಜನಿಕರು ಜಾಗೃತರಾಗಿ, ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ.

ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಿ. ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು.

ಎಲ್ಲ ಅರ್ಹ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳಬೇಕು. ಆ ಮೂಲಕ ಕೋವಿಡ್ ನಿಯಂತ್ರಣಕ್ಕೆ ಕೈ ಜೋಡಿಸುವಂತೆ ಕಳಕಳಿಯ ಮನವಿ ಮಾಡುತ್ತೇನೆ.

ಶಿಕ್ಷಕರಿಗೂ ಕೋವಿಡ್ ಲಸಿಕೆ ಹಾಕಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು.

ಶಾಲಾ–ಕಾಲೇಜುಗಳಿಗೆರಜೆಇಲ್ಲ,ಮುಚ್ಚುವುದಿಲ್ಲ ಎಂದುಮುಖ್ಯಮಂತ್ರಿಸ್ಪಷ್ಟಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.