ADVERTISEMENT

ಜಿಲ್ಲೆಗಳಲ್ಲೇ ವಾಸ್ತವ್ಯ ಹೂಡಿ: ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಮಳೆ ಪೀಡಿತ 8 ಜಿಲ್ಲೆಗಳ ಸಚಿವರ ಜತೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 12:50 IST
Last Updated 6 ಆಗಸ್ಟ್ 2020, 12:50 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಸಿಲುಕಿರುವ ಜನರ ರಕ್ಷಣೆಗೆ ತಕ್ಷಣವೇ ಧಾವಿಸುವಂತೆ ಪ್ರವಾಹ ಪೀಡಿತ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಎಂಟು ಜಿಲ್ಲೆಗಳ ಉಸ್ತುವಾರಿ ಸಚಿವರ ಜತೆಗೆ ಯಡಿಯೂರಪ್ಪ ಅವರು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಿಂದಲೇ ದೂರವಾಣಿ ಮೂಲಕ ಮಾತನಾಡಿಸಿ, ಮಳೆ, ಪ್ರವಾಹದಿಂದ ಹಾನಿಯಾದ ಪ್ರದೇಶಕ್ಕೆ ತಕ್ಷಣ ಭೇಟಿ ನೀಡಿ ಪರಿಹಾರ ಕಾರ್ಯ ಆರಂಭಿಸಬೇಕು ಎಂದೂ ತಿಳಿಸಿದ್ದಾರೆ.

ಪ್ರವಾಹ ಬರುವುದಕ್ಕೂ ಮೊದಲೇ ಕ್ರಮ ತೆಗೆದುಕೊಳ್ಳಬೇಕು. ಪ್ರವಾಹ ಬಂದ ಮೇಲೆ ಪರಿಸ್ಥಿತಿ ನಿಭಾಯಿಸುವುದು ಕಷ್ಟವಾಗುತ್ತದೆ. ಸ್ಥಳೀಯ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರು ಮತ್ತು ಶಾಸಕರ ಜತೆ ಸೇರಿ ಕೆಲಸ ಮಾಡಬೇಕು. ಅಲ್ಲಿನ ಪರಿಸ್ಥಿತಿ ಸುಧಾರಣೆ ಆಗುವವರೆಗೂ ಉಸ್ತುವಾರಿ ಸಚಿವರು ಆಯಾಯ ಜಿಲ್ಲೆಗಳಲ್ಲೇ ವಾಸ್ತವ್ಯ ಹೂಡಬೇಕು ಎಂದು ಯಡಿಯೂರಪ್ಪ ಸೂಚಿಸಿದ್ದಾರೆ.

ADVERTISEMENT

ತಗ್ಗು ಪ್ರದೇಶಗಳಲ್ಲಿ ಜನತೆ ಮತ್ತು ಜಾನುವಾರುಗಳನ್ನು ರಕ್ಷಿಸಬೇಕು. ಎಲ್ಲ ಕರೆಗಳಲ್ಲಿ ರಕ್ಷಣಾ ಕೇಂದ್ರಗಳನ್ನು ಆರಂಭಿಸಿ, ಅಲ್ಲಿ ಸಂತ್ರಸ್ತರನ್ನು ಇರಿಸಿ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು. ಇದಕ್ಕಾಗಿ ಖಾಲಿ ಇರುವ ಶಾಲಾ– ಕಾಲೇಜುಗಳು ಮತ್ತು ವಿದ್ಯಾರ್ಥಿ ನಿಲಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.