ADVERTISEMENT

ಸಂಪುಟದಿಂದ‌ ಕೊಕ್‌: ಕೆಲವರನ್ನು ಕೈಬಿಡುವ ಸುಳಿವು ನೀಡಿದ ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 21:01 IST
Last Updated 10 ನವೆಂಬರ್ 2020, 21:01 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ‘ರಾಜ್ಯ ಸಚಿವ ಸಂಪುಟವನ್ನು ಇನ್ನು ಎರಡು ಮೂರು ದಿನಗಳಲ್ಲಿ ವಿಸ್ತರಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಕೆಲವರನ್ನು ಸಂಪುಟದಿಂದ ಕೈ ಬಿಡಬೇಕಾಗುತ್ತದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಉಪಚುನಾವಣೆ ಗೆಲುವಿನ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಸಂಬಂಧ ನಾಳೆ ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸುತ್ತೇನೆ’ ಎಂದು ಅವರು ತಿಳಿಸಿದರು.

‘ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮತದಾರರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತೇನೆ. ಆರ್‌.ಆರ್‌.ನಗರದ ಗೆಲುವು ಅತ್ಯಂತ ದೊಡ್ಡ ಗೆಲುವು. ಜನತೆ ನಮ್ಮ ಸರ್ಕಾರದ ಕಾರ್ಯವೈಖರಿಯನ್ನು ಮೆಚ್ಚಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅಬಾರಿಯಾಗಿದ್ದೇನೆ’ ಎಂದು ಅವರು ಹೇಳಿದರು.

ADVERTISEMENT

ಸರ್ಕಾರದ ಆಡಳಿತ ಬಗ್ಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಯಡಿಯೂರಪ್ಪ, ‘ನಮ್ಮ ಸರ್ಕಾರ ಮಾಡಿರುವ ಸಾಧನೆಗಳ ಬಗ್ಗೆ ನಾವು ಮಾತನಾಡುತ್ತೇವೆ. ಸಿದ್ದರಾಮಯ್ಯ ಅವರಿಗೆ ನಾನ್ಯಾಕೆ ಉತ್ತರ ನೀಡಬೇಕು. ವಿರೋಧ ಪಕ್ಷಗಳಿಗೆ ಜನರೇ ಉತ್ತರ ನೀಡಿದ್ದಾರೆ’ ಎಂದು ಹೇಳಿದರು.

‘ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪಚುನಾವಣೆಗೆ ನಾವು ಸಿದ್ದತೆ ಆರಂಭಿಸಿದ್ದೇವೆ. ಬಿ.ವೈ.ವಿಜಯೇಂದ್ರ ಅವರು ಬಸವಕಲ್ಯಾಣದಿಂದ ಸ್ಪರ್ಧಿಸುವುದಿಲ್ಲ. ಆ ಚುನಾವಣೆಯಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.