ADVERTISEMENT

ರೈತರ ಆದಾಯ ದ್ವಿಗುಣಕ್ಕೆ ಕ್ರಮ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 19:31 IST
Last Updated 2 ಜನವರಿ 2021, 19:31 IST
ಬಿ.ಎಸ್. ಯಡಿಯೂರಪ್ಪ 
ಬಿ.ಎಸ್. ಯಡಿಯೂರಪ್ಪ    

ಬೆಂಗಳೂರು: ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿವರ್ತಿಸುವ ಮೂಲಕ ರೈತರ ಆದಾಯ ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ‘ತೋಟಗಾರಿಕಾ ಮೇಳ’ವನ್ನು ಶನಿವಾರ ಆನ್‌ಲೈನ್‌ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ‘ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ ಮತ್ತು ಪ್ಯಾಕೇಜಿಂಗ್‌ ಕೆಲಸಕ್ಕೆ ಪೂರಕವಾಗಿ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುವ ಯೋಜನೆ ಇದೆ. ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಮತ್ತು ಭಾರತೀಯ ತೋಟಗಾರಿಕಾ ಸಂಸ್ಥೆಗಳ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ’ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ 100ನೇ ‘ಕಿಸಾನ್‌ ರೈಲು’ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ 27,000 ಟನ್‌ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ರಾಜ್ಯದಿಂದ ದಾಳಿಂಬೆ, ಕಿತ್ತಳೆ ಮತ್ತು ಇತರ ತೋಟಗಾರಿಕಾ ಉತ್ಪನ್ನಗಳನ್ನು ಸಾಗಿಸಲು ಈ ರೈಲುಗಳನ್ನು ಬಳಸಿಕೊಳ್ಳಲಾಗುವುದು. ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿ ಪೂರಕವಾಗಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ತೋಟಗಾರಿಕಾ ಸಚಿವ ಕೆ. ನಾರಾಯಣ ಗೌಡ ಮಾತನಾಡಿದರು. ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ. ಇಂದ್ರೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.