ADVERTISEMENT

ಎರಡು ತಿಂಗಳ ಹಿಂದೆ ರಾಜೀನಾಮೆಗೆ ನಿರ್ಧರಿಸಿದ್ದೆ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 11:39 IST
Last Updated 22 ಜುಲೈ 2021, 11:39 IST
ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಸಾಂದರ್ಭಿಕ ಚಿತ್ರ
ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಸಾಂದರ್ಭಿಕ ಚಿತ್ರ   

ಬೆಂಗಳೂರು: ಪಕ್ಷದ ವರಿಷ್ಠರು ಹೇಳುವ ತನಕ ಮುಖ್ಯಮಂತ್ರಿಯಾಗಿರುತ್ತೇನೆ. ರಾಜೀನಾಮೆ ನೀಡಿ ಎಂದ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ಸಂಜೆ ಹೇಳಿದ್ದು, ಈ ಬೆಳವಣಿಗೆಯಿಂದ ಅವರು ರಾಜೀನಾಮೆ ನೀಡುವುದು ಖಚಿತವಾಗಿದೆ.

ಗುರುವಾರ ಬೆಳಿಗ್ಗೆ ಕಾಚರಕನಹಳ್ಳಿಯಲ್ಲಿ ಮಾತನಾಡಿದ್ದ ಅವರು, ಇದೇ 25ಕ್ಕೆ ವರಿಷ್ಠರ ಸಂದೇಶ ಬರಲಿದ್ದು, ಆ ಪ್ರಕಾರವೇ ನಡೆದು ಕೊಳ್ಳುತ್ತೇನೆ ಎಂದು ತಿಳಿಸಿದ್ದರು. ಸಂಜೆ ಅವರು ಸಚಿವ ಸಂಪುಟ ಸಭೆಗೆ ಹಾಜರಾಗುವುದಕ್ಕೆ ಮುನ್ನ ಸುದ್ದಿಗಾರರ ಜತೆ ಮಾತನಾಡಿ, ವರಿಷ್ಠರು ಬೇಡ ಎಂದ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದರು.

ರಾಜೀನಾಮೆ ಬಳಿಕ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುತ್ತೇನೆ. ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಎಂಬ ಬಗ್ಗೆ ಯಾರ ಹೆಸರೂ ಶಿಫಾರಸು ಮಾಡುವುದಿಲ್ಲ. ಅದರ ಅಗತ್ಯವೂ ಇಲ್ಲ. ಕೇಳಿದರೂ ಯಾರ ಹೆಸರನ್ನೂ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ADVERTISEMENT

ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ವರಿಷ್ಠರಿಂದ ಅಧಿಕೃತ ಸೂಚನೆ ಬಂದಿಲ್ಲ. ಇದೇ 25 ಕ್ಕೆ ಸೂಚನೆ ಬರಬಹುದು. ಅದಕ್ಕಾಗಿ ಕಾಯುತ್ತಿದ್ದೇನೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.