ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬರೆದಿರುವ ಪತ್ರ ಸಿಕ್ಕಿದೆ. ಆ ಪತ್ರದ ಸಾರಾಂಶವನ್ನು ಅವಲೋಕಿಸಿದ್ದೇನೆ. ಅವರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಏನೆಲ್ಲ ಮಾಡಲು ಸಾಧ್ಯವೋ ಆ ಸಂಬಂಧ ತೀರ್ಮಾನ ತೆಗೆದುಕೊಳ್ಳುತ್ತೇನೆ ಮತ್ತು ಗೌರವಪೂರ್ವಕವಾಗಿ ಉತ್ತರ ಕೊಡುತ್ತೇನೆ’ ಎಂದು ತಿಳಿಸಿದರು.
‘ಕೋವಿಡ್ ಸಂದರ್ಭದಲ್ಲಿ ರಾಜ್ಯಕ್ಕೆ ಏನೂ ಮಾಡದೇ ಈಗ ಯೋಗ ಮಾಡಲು ಬಂದಿದ್ದಾರೆ’ ಎಂಬ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೋದಿಯವರು ಇಡೀ ದೇಶದಲ್ಲಿ ಕೋವಿಡ್ ಯಾವ ರೀತಿ ನಿರ್ವಹಿಸಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿದೆ. ಭಾರತದಲ್ಲಿ ಕೋವಿಡ್ ನಿರ್ವಹಣೆಗೆ ಜಗತ್ತೇ ಕೊಂಡಾಡಿದೆ. ಕರ್ನಾಟಕಕ್ಕೆ ಸಾವಿರಾರು ಕೋಟಿ ಹಣ ನೀಡಿದ್ದೂ ಅಲ್ಲದೇ, ಔಷಧ, ಲಸಿಕೆ, ವೈದ್ಯಕೀಯ ಉಪಕರಣಗಳು, ಆಮ್ಲಜನಕವನ್ನು ಕೊರತೆ ಆಗದಂತೆ ಪೂರೈಸಿದ್ದಾರೆ. ಮೋದಿಯವರ ಜನಪ್ರಿಯತೆ ಸಹಿಸದೇ ಸಿದ್ದರಾಮಯ್ಯ ಏನೇನೋ ಮಾತನಾಡುತ್ತಾರೆ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಅಭಿವೃದ್ಧಿ, ಜನಪರ ಕಾರ್ಯಕ್ರಮಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.