ಬೆಂಗಳೂರು: ರಾಜ್ಯದ ಒಂದಿಂಚು ಪ್ರದೇಶವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆ ಇಲ್ಲ ಎಂಬ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಗೃಹ ಸಚಿವರಿಂದ ಕೊಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.
ರಾಜ್ಯದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಬದ್ಧ ಎಂಬುದಾಗಿ ಮಹಾರಾಷ್ಟ್ರ ವಿಧಾನಮಂಡಲದಲ್ಲಿ ನಿರ್ಣಯ ಕೈಗೊಂಡಿರುವ ಕುರಿತು ಬುಧವಾರ ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ‘ರಾಜ್ಯದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆ ಇಲ್ಲ ಎಂಬ ಪೊಳ್ಳು ಹೇಳಿಕೆಗಳನ್ನು ನೀಡುವುದನ್ನು ಮುಖ್ಯಮಂತ್ರಿ ನಿಲ್ಲಿಸಲಿ. ಆ ವಿಚಾರದಲ್ಲಿ ನಿಜವಾದ ಬದ್ಧತೆ ತೋರಿಸಲಿ’ ಎಂದು ಆಗ್ರಹಿಸಿದ್ದಾರೆ.
‘ನಿಜವಾಗಿಯೂ ರಾಜ್ಯದ ಒಂದು ಇಂಚು ಪ್ರದೇಶವನ್ನೂ ಬಿಟ್ಟುಕೊಡಲು ಸಿದ್ಧರಿಲ್ಲದೇ ಇದ್ದರೆ ಮುಖ್ಯಮಂತ್ರಿಯವರು ಈಗಾಗಲೇ ದಿಟ್ಟ ನಿರ್ಧಾರ ಕೈಗೊಳ್ಳಬೇಕಿತ್ತು. ಈಗಲಾದರೂ ದೆಹಲಿಗೆ ಸರ್ವಪಕ್ಷಗಳ ಮುಖಂಡರ ನಿಯೋಗ ಕರೆದೊಯ್ಯಲಿ. ರಾಜ್ಯದ ಯಾವುದೇ ಪ್ರದೇಶವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆ ಇಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಭರವಸೆ ಕೊಡಿಸಲಿ’ ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.