ADVERTISEMENT

ರಾಜಭವನದಿಂದಲೇ ಪತ್ರ ಸೋರಿಕೆ: ಸಿ.ಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2024, 20:53 IST
Last Updated 22 ಸೆಪ್ಟೆಂಬರ್ 2024, 20:53 IST
siddaramaiah
siddaramaiah   

ಬೆಂಗಳೂರು: ‘ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿದ್ದ ಜಮೀನು ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಬರೆದ ಪತ್ರವು ರಾಜಭವನದಿಂದಲೇ
ಸೋರಿಕೆ ಆಗಿರಬಹುದು. ಈ ಬಗ್ಗೆ ತನಿಖೆ
ಯಾಗಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಹಸ್ಯ ಮಾಹಿತಿ ಮತ್ತು ಪತ್ರಗಳು ಸೋರಿಕೆಯಾಗುತ್ತಿರುವ ಸಂಬಂಧ ರಾಜ್ಯಪಾಲರು ಇತ್ತೀಚೆಗೆ ಪ್ರಶ್ನೆ ಎತ್ತಿದ್ದರು.

‘ತನಿಖೆ ಮತ್ತು ವಿಚಾರಣೆಗೆ ಅನುಮತಿ ನೀಡಿ ಎಂದು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮನವಿಗಳ ವಿವರ ಮತ್ತು ದಿನಾಂಕಗಳ ಗೋಪ್ಯ ಮಾಹಿತಿ ರಾಜ್ಯ ಸರ್ಕಾರಕ್ಕೆ ಗೊತ್ತಾಗಿದ್ದು ಹೇಗೆ’ ಎಂದು ಪ್ರಶ್ನಿಸಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ರಾಜ್ಯ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದ್ದರು.

ADVERTISEMENT

ಈ ಡಿನೋಟಿಫಿಕೇಷನ್‌ಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್‌.ಎಸ್‌.ಕೆಂಪಣ್ಣ ಆಯೋಗ ಸಲ್ಲಿಸಿರುವ ವರದಿ ಮತ್ತು ದಾಖಲೆಗಳನ್ನು ಸಲ್ಲಿಸಿ ಎಂದು ರಾಜ್ಯಪಾಲ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಉಲ್ಲೇಖಿಸಿ ನಗರಾಭಿವೃದ್ಧಿ ಇಲಾಖೆಯು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಪತ್ರ ಬರೆದಿತ್ತು. ಈ ಎರಡೂ ಪತ್ರಗಳ ಸಂಬಂಧ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿತ್ತು. ಅದರ ಬೆನ್ನಲ್ಲೇ ಸಿದ್ದರಾಮಯ್ಯ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ. ‘ತಾವು ಬರೆದ ಪತ್ರ ಸೋರಿಕೆಯಾಗಿದೆ ಎಂದು ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ರಾಜ್ಯಪಾಲರು ಪತ್ರ ಬರೆದಿರುವ ವಿಚಾರವನ್ನು ನಾನೂ ಪತ್ರಿಕೆಯಲ್ಲಿ ಓದಿ ತಿಳಿದಿದ್ದೇನೆ’ ಎಂದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.