ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು: ‘16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮಾರ್ಚ್ 1ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ’ ಎಂದು ಚಲನಚಿತ್ರೋತ್ಸವದ ಸಮನ್ವಯ ಸಮಿತಿಯ ಅಧ್ಯಕ್ಷರೂ ಆಗಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ ತಿಳಿಸಿದರು.
ರಾಜ್ಯ ಸರ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಜಂಟಿಯಾಗಿ ಆಯೋಜಿಸುತ್ತಿರುವ ಈ ಚಲನಚಿತ್ರೋತ್ಸವದ ಸಿದ್ಧತೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಪರಿಕಲ್ಪನೆಯಲ್ಲಿ ನಡೆಯಲಿರುವ ಈ ಚಿತ್ರೋತ್ಸವದಲ್ಲಿ 60 ದೇಶಗಳ ಸುಮಾರು 200 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ‘ಬೆಂಗಳೂರಿನಲ್ಲಿ ಜಗತ್ತು’ ಎಂಬ ಶೀರ್ಷಿಕೆಯಡಿ ವಿದೇಶಿ ಚಿತ್ರಗಳ ಪ್ರದರ್ಶನ ನಡೆಯಲಿದೆ’ ಎಂದರು.
‘ರಾಜಾಜಿನಗರದ ಒರಾಯನ್ ಮಾಲ್ನ 11 ಪರದೆಗಳಲ್ಲಿ ಮಾರ್ಚ್ 2ರಿಂದ ಸಾರ್ವಜನಿಕರಿಗೆ ಸಿನಿಮಾಗಳ ಪ್ರದರ್ಶನ ಆಯೋಜಿಸಲಾಗಿದೆ. ಚಿತ್ರೋತ್ಸವದಲ್ಲಿ ಏಷ್ಯಾ, ಭಾರತೀಯ ಮತ್ತು ಕನ್ನಡ ಚಲನಚಿತ್ರಗಳ ಸ್ಫರ್ಧಾ ವಿಭಾಗಗಳಿವೆ. ಈ ಮೂರೂ ವಿಭಾಗಗಳಲ್ಲಿ ತಲಾ ಮೂರು ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ ನೀಡಲಾಗುವುದು. ಚಿತ್ರಗಳ ವೀಕ್ಷಣೆಗೆ ಸಾರ್ವಜನಿಕರಿಗೆ ₹800, ಚಿತ್ರೋದ್ಯಮದ ಸದಸ್ಯರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರಿಗೆ ₹400 ಶುಲ್ಕ ಇರಲಿದೆ. ಚಿತ್ರೋತ್ಸವದ ಜಾಲತಾಣದಲ್ಲಿ (biffes.org) ನೋಂದಾಯಿಸಿಕೊಳ್ಳಬಹುದು’ ಎಂದು ಮಾಹಿತಿ ನೀಡಿದರು.
‘ಆನ್ಲೈನ್ನಲ್ಲಿ ನೋಂದಾಯಿಸಿಕೊಂಡವರು ಫೆ. 18ರಿಂದ ನಂದಿನಿ ಲೇಔಟ್ನಲ್ಲಿರುವ ಚಲನಚಿತ್ರ ಅಕಾಡೆಮಿ ಹಾಗೂ ಶಿವಾನಂದ ವೃತ್ತದ ಬಳಿ ಇರುವ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಪ್ರತಿನಿಧಿ ಕಾರ್ಡ್ಗಳನ್ನು ಪಡೆಯಬಹುದು. ಮಾರ್ಚ್ 8ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ. ಏಷ್ಯಾ, ಭಾರತೀಯ ಮತ್ತು ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ’ ಎಂದು ಅವರು ತಿಳಿಸಿದರು.
ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ಮಾತನಾಡಿ, ‘ಚಿತ್ರೋತ್ಸವದ ಭಾಗವಾಗಿ ಮಾರ್ಚ್ 3ರಂದು ಎಐ (ಕೃತಕ ಬುದ್ದಿಮತ್ತೆ) ಕುರಿತ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಸಿನಿಮಾ ಕ್ಷೇತ್ರದ ಮೇಲೆ ಎಐ ತಂತ್ರಜ್ಞಾನದ ಪ್ರಭಾವದ ಕುರಿತು ತಜ್ಞರು ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಅಲ್ಲದೆ, ಹಿಂದಿನ ಕಾಲದಲ್ಲಿ ಇದ್ದ ಟೆಂಟ್ ಸಿನಿಮಾ ರೀತಿಯಲ್ಲಿ ಕೆಲವು ಸಿನಿಮಾಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಜೊತೆಗೆ ಒಟಿಟಿ, 2024ರ ಹಿಟ್ ಚಿತ್ರಗಳ ನಿರ್ದೇಶಕರ ಜೊತೆ ಸಂವಾದ, ಚಿತ್ರರಂಗದ ಸಾಧಕರ ಜೊತೆ ಮಾತುಕತೆ, ಚಿತ್ರ ವಿತರಣೆ, ನಿರ್ಮಾಣದ ಸವಾಲುಗಳ ಕುರಿತು ಉಪನ್ಯಾಸ ನಡೆಯಲಿದೆ. ನಟ ಕಿಶೋರ್ ಚಿತ್ರೋತ್ಸವದ ರಾಯಭಾರಿ ಆಗಿದ್ದಾರೆ’ ಎಂದರು.
ಚಲನಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಎನ್. ವಿದ್ಯಾಶಂಕರ್ ಮಾತನಾಡಿ, ‘ಸ್ಪರ್ಧಾ ವಿಭಾಗಕ್ಕೆ 15 ದಿನಗಳ ಅವಧಿಯಲ್ಲಿ 411 ಸಿನಿಮಾಗಳು ಬಂದಿವೆ. ಭಾರತೀಯ ಮತ್ತು ಅಂತರಾಷ್ಟ್ರೀಯ ಜ್ಯೂರಿಗಳು ತೀರ್ಪುಗಾರರಾಗಿರುತ್ತಾರೆ’ ಎಂದರು.
ಚಲನಚಿತ್ರೋತ್ಸವ ಸಮನ್ವಯ ಸಮಿತಿಯ ಉಪಾಧ್ಯಕ್ಷರೂ ಆಗಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ ಎಂ. ನಿಂಬಾಳಕರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.