ADVERTISEMENT

ಸಿದ್ದರಾಮಯ್ಯ ಮನಸ್ಸಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸುತ್ತೇನೆ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2023, 15:00 IST
Last Updated 16 ಫೆಬ್ರುವರಿ 2023, 15:00 IST
ಸಿದ್ದರಾಮಯ್ಯ ಮತ್ತು ಸಿ.ಎನ್. ಅಶ್ವತ್ಥನಾರಾಯಣ
ಸಿದ್ದರಾಮಯ್ಯ ಮತ್ತು ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ‘ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಿ ಎಂಬ ಅರ್ಥದಲ್ಲಿ ನಾನು ಹೇಳಿದ್ದೇನೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಗೌರವವಿದೆ. ಬೇರೆ ಯಾವುದೇ ಅರ್ಥದಲ್ಲೂ ಅವರನ್ನು ಟೀಕಿಸಿಲ್ಲ. ನನ್ನ ಮಾತುಗಳಿಂದ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಹೇಳಿದರು.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ‘ರಾಜ್ಯದಲ್ಲಿ ಎಲ್ಲ ಕಡೆಗಳಲ್ಲೂ ದ್ವೇಷದ ಮಾತುಗಳು ಕೇಳಿ ಬರುತ್ತಿವೆ. ಸಚಿವ ಅಶ್ವತ್ಥನಾರಾಯಣ ಅವರೂ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕುವುದಾಗಿ ಹೇಳಿದ್ದಾರೆ. ಇದು ಅಕ್ಷಮ್ಯ ನಡವಳಿಕೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಶ್ವತ್ಥನಾರಾಯಣ, ‘ಮಂಡ್ಯ ಜಿಲ್ಲೆಯಲ್ಲಿ ಸೋಮವಾರ ಕಾರ್ಯಕರ್ತರ ರ್‍ಯಾಲಿ ನಡೆದಿತ್ತು. ಆಗ ಸಿದ್ದರಾಮಯ್ಯ ಅವರನ್ನು ಟಿಪ್ಪು ಜತೆಗೆ ಹೋಲಿಸಿ ಮಾತನಾಡಿದೆ. ಟಿಪ್ಪು ಬಗ್ಗೆ ಸಿದ್ದರಾಮಯ್ಯ ಅವರಿಗೆ ಒಂದು ರೀತಿಯಲ್ಲಿ ಪ್ರೀತಿ ಇದೆ. ನರಹಂತಕ ಟಿಪ್ಪುವನ್ನು ವೈಭವೀಕರಿಸಿ ಮಾತನಾಡುತ್ತಾರೆ ಎಂದು ಹೇಳಿದ್ದು ನಿಜ. ಆದರೆ, ಸಿದ್ದರಾಮಯ್ಯ ಬಗ್ಗೆ ಅಗೌರವದಿಂದ ಮಾತನಾಡಿಲ್ಲ. ಮಂಡ್ಯ ಜಿಲ್ಲೆಯ ಆಡು ಭಾಷೆಯಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಸೋಲಿಸಬೇಕು ಹೇಳಿದ್ದೆ. ನನ್ನ ಮಾತುಗಳಿಂದ ಅವರಿಗೆ ನೋವಾಗಿದ್ದರೆ ವಿಷಾಧಿಸುತ್ತೇನೆ’ ಎಂದರು.

ADVERTISEMENT

ಯು.ಟಿ.ಖಾದರ್‌ ಮಾತನಾಡಿ, ರಾಜ್ಯದ ವಿವಿಧ ಕಡೆಗಳಲ್ಲಿ ದ್ವೇಷ ಭಾಷಣಗಳು ನಡೆಯುತ್ತಿವೆ. ಇದರಿಂದ ಅಶಾಂತಿ ಸೃಷ್ಟಿಯಾಗುತ್ತದೆ. ಆದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಗ್ಗೆ ಮಾತನಾಡುತ್ತಾ, ಟಿಪ್ಪುಗೆ ಹೊಡೆದ ರೀತಿಯಲ್ಲಿ ಹೊಡೆಯಬೇಕು ಎಂದಿದ್ದಾರೆ. ಆದ್ದರಿಂದ ಇವರ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಶ್ವತ್ಥನಾರಾಯಣ ವಿರುದ್ದ ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್‌ ಸದಸ್ಯರಾದ ತನ್ವೀರ್ ಸೇಠ್, ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ, ಕೃಷ್ಣಬೈರೇಗೌಡ ಅವರೂ ಆಗ್ರಹಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.