ADVERTISEMENT

ನೂತನ ಶಿಕ್ಷಣ ನೀತಿಯಿಂದ ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಭಾರತ: ಡಿಸಿಎಂ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 8:30 IST
Last Updated 15 ಸೆಪ್ಟೆಂಬರ್ 2020, 8:30 IST
ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ    

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಭಾರತವು ಜಗತ್ತಿನಲ್ಲಿಯೇ ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಎಂದ ವಿಶ್ವಾಸವನ್ನು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕ್ರಿಸ್ತು ಜಯಂತಿ ಕಾಲೇಜ್ ಹಾಗೂ ಬೆಂಗಳೂರು ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರ ಹಮ್ಮಿಕೊಂಡಿದ್ದ ಶಿಕ್ಷಣ ನೀತಿ ಜಾರಿ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಶಿಕ್ಷಣ ವ್ಯವಸ್ಥೆ ಹೇಗಿರಬೇಕು? ಯಾವ ದಿಕ್ಕಿನಲ್ಲಿ ಸಾಗಬೇಕು? ಎಂಬ ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಿರುವ ಶಿಕ್ಷಣ ನೀತಿ, ಇನ್ನು ಕೆಲವೇ ವರ್ಷಗಳಲ್ಲಿ ಭಾರತವನ್ನು ಆಮೂಲಾಗ್ರವಾಗಿ ಬದಲಾಯಿಸಲಿದೆ ಎಂಬ ಅಚಲ ನಂಬಿಕೆ ನನಗಿದೆ ಎಂದರು.

ಶಿಕ್ಷಣ ನೀತಿಯಲ್ಲಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ರೂಪಿಸುವುದು, ಗುಣಮಟ್ಟದ ಬೋಧನೆ, ಗುಣಮಟ್ಟದ ಕಲಿಕೆ ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಅತ್ಯಂತ ಮಹತ್ವದ ಅಂಶಗಳು. ಇದರ ಜತೆಗೆ, ಬಹು ವಿಷಯಗಳ ಕಲಿಕೆ ಹಾಗೂ ವಿದ್ಯಾರ್ಥಿಗಳಿಗೆ ಕಲಿಕೆಯ ಅನೇಕ ಆಯ್ಕೆಗಳೂ ಇರುತ್ತವೆ. ಈ ಹಿನ್ನೆಲೆಯಲ್ಲಿ ಬಹುಮುಖ ಪ್ರತಿಭೆಗಳು ಹೊರಬರಲು ಹೊಸ ನೀತಿ ಎಲ್ಲ ರೀತಿಯ ಉತ್ತೇಜನ ನೀಡುತ್ತದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ADVERTISEMENT

ಜಾರಿಯತ್ತ ದೃಢವಾದ ಹೆಜ್ಜೆ:ಇದೇ ವೇಳೆ ಶಿಕ್ಷಣ ನೀತಿಯ ಜಾರಿಯತ್ತ ರಾಜ್ಯ ಸರಕಾರವು ಅತ್ಯಂತ ದೃಢವಾದ ಹೆಜ್ಜೆಗಳನ್ನು ಇಡುತ್ತಿದೆ. ಮುಖ್ಯವಾಗಿ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳುವತ್ತ ಮಗ್ನವಾಗಿದೆ. ಇದರ ಜತೆಯಲ್ಲಿಯೇ ಹೊಸ ಶಿಕ್ಷಣ ನೀತಿ ಅತ್ಯಂತ ಪರಿಣಾಮಕಾರಿಯಾಗಿ ಜಾರಿ ಆಗಬೇಕಾದರೆ ವಿಶ್ವವಿದ್ಯಾಲಯಗಳ ಪಾತ್ರ ಬಹುಮುಖ್ಯವಾಗಿದೆ. ಜತೆಗೆ, ಸಮಾಜದ ಪ್ರತಿಯೊಬ್ಬರೂ ಇದಕ್ಕಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಕರೆ ನೀಡಿದರು.

ಈ ಸಮ್ಮೇಳನದಲ್ಲಿ ಶಿಕ್ಷಣ ನೀತಿ ಸಮಿತಿಯ ಸದಸ್ಯ ಪ್ರೊ. ಎಂ.ಕೆ. ಶ್ರೀಧರ್, ಬೆಂಗಳೂರು ಉತ್ತರ ವಿವಿ ಉಪ ಕುಲಪತಿ ಪ್ರೊ. ಟಿ.ಡಿ. ಕೆಂಪರಾಜು, ಕ್ರಿಸ್ತು ಜಯಂತಿ ಕಾಲೇಜಿನ ಪ್ರಾಂಶುಪಾಲ ಡಾ. ಅಗಸ್ಟೀನ್ ಜಾರ್ಜ್ ಮುಂತಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.