ADVERTISEMENT

ಕರಾವಳಿ: 23ರವರೆಗೆ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 20:00 IST
Last Updated 18 ಜೂನ್ 2020, 20:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇದೇ 19ರಿಂದ 23ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 23ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಐದೂ ದಿನಗಳು 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಸೂಚಿಸಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ADVERTISEMENT

ಉಡುಪಿ ಜಿಲ್ಲೆಯ ಕೋಟದಲ್ಲಿ ಗುರುವಾರ 12 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ, ಕಾರವಾರ 11, ಅಂಕೋಲಾ 9, ಗೋಕರ್ಣ, ಕುಮಟಾ, ಸಿದ್ದಾಪುರ 8, ಉಡುಪಿ, ಯಲ್ಲಾಪುರ 6, ಕುಂದಾಪುರ, ಮಂಗಳೂರು, ಮಡಿಕೇರಿ, ವಿರಾಜಪೇಟೆ, ಕೊಟ್ಟಿಗೆಹಾರ 5, ಹೊನ್ನಾವರ, ಪುತ್ತೂರು, ಸುಬ್ರಹ್ಮಣ್ಯ, ಸುಳ್ಯ, ಕಾರ್ಕಳ, ಹೊಸನಗರ, ಶೃಂಗೇರಿ 4, ಮೂಡುಬಿದ್ರೆ, ಧರ್ಮಸ್ಥಳ, ತೀರ್ಥಹಳ್ಳಿ 3, ಬನವಾಸಿ, ಕಲಬುರ್ಗಿ, ಸೋಮವಾರಪೇಟೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ರಾಯಚೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.