ADVERTISEMENT

ಒಳಮೀಸಲಾತಿಗೆ ಬದ್ಧ: ಸಿದ್ದರಾಮಯ್ಯ

ಅನುಮಾನ, ಅಪನಂಬಿಕೆ ಬೇಡ: ಮುಖ್ಯಮಂತ್ರಿ ಸ್ಪಷ್ಟ ಭರವಸೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 16:21 IST
Last Updated 28 ಆಗಸ್ಟ್ 2024, 16:21 IST
<div class="paragraphs"><p>ದಲಿತ ಶಾಸಕರು ಮತ್ತು ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು</p></div>

ದಲಿತ ಶಾಸಕರು ಮತ್ತು ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು

   

ಬೆಂಗಳೂರು: ‘ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ನೀಡಲು ನಾನು ಬದ್ಧನಾಗಿದ್ದೇನೆ. ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವರಾದ ಕೆ.ಎಚ್‌.ಮುನಿಯಪ್ಪ, ಆರ್‌.ಬಿ.ತಿಮ್ಮಾಪುರ, ಮಾಜಿ ಸಚಿವ ಎಚ್‌.ಆಂಜನೇಯ ಮತ್ತು ಕಾಂಗ್ರೆಸ್‌ ಮುಖಂಡ ಎಲ್‌.ಹನುಮಂತಯ್ಯ ಮತ್ತು ಇತರರನ್ನು ಒಳಗೊಂಡ ನಿಯೋಗದ ಜತೆ ಬುಧವಾರ ಚರ್ಚೆ ನಡೆಸಿ ಮಾತನಾಡಿದರು.

ADVERTISEMENT

‘ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ದಲಿತ ಸಮುದಾಯದ ನಾಯಕರ ಜತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಒಳ ಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸಂತೋಷದ ವಿಷಯ. ಒಳಮೀಸಲಾತಿ ಜಾರಿಗೆ ಬದ್ಧನಾಗಿದ್ದೇನೆ’ ಎಂದು ಭರವಸೆ ನೀಡಿದರು.

‘ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾಪವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥ ಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆ ಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ’ ಎಂದರು.

‘ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳ ಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ’ ಎಂದರು.

‘ಬಿಜೆಪಿ ನಾಯಕರು ಅನಗತ್ಯ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಬಿಜೆಪಿ ನಾಯಕರ ಕುಟಿಲತನವನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ’ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.