
ಬೆಂಗಳೂರು: ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ 2012-13ನೇ ಸಾಲಿನ ಕಾರ್ಯಪಾಲನಾ ವರದಿ ನಾಪತ್ತೆ ಪ್ರಕರಣದ ವಿಚಾರಣೆಗೆ ಪ್ರವಾಸೋದ್ಯಮ ಇಲಾಖೆ ಜಂಟಿ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು, ಅರಣ್ಯ ಇಲಾಖೆ ಜಂಟಿ ಕಾರ್ಯದರ್ಶಿ, ಕಾನೂನು ಇಲಾಖೆ ಉಪ ಕಾರ್ಯದರ್ಶಿ, ಡಿಪಿಎಆರ್ನ ಉಪ ಕಾರ್ಯದರ್ಶಿ ಸದಸ್ಯರಾಗಿದ್ದು, ಪ್ರವಾಸೋದ್ಯಮ ಇಲಾಖೆಯ ಶಾಖಾಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. 30 ದಿನಗಳಲ್ಲಿ ವರದಿ ನೀಡಲು ಸಮಿತಿಗೆ ಸೂಚಿಸಲಾಗಿದೆ.
ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ.ಬಾಲಸುಬ್ರಹ್ಮಣ್ಯ ಪ್ರಸಾದ್ ಅವರು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯ ಕಾರ್ಯಪಾಲನಾ ವರದಿ ನೀಡುವಂತೆ ಪ್ರವಾಸೋದ್ಯಮ ಸಚಿವಾಲಯಕ್ಕೆ ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿ ಸಲ್ಲಿಸಿದ್ದರು. ಆದರೆ, ಕಾರ್ಯಪಾಲನಾ ವರದಿ ಲಭ್ಯವಿಲ್ಲ ಎಂದು ಪ್ರವಾಸೋದ್ಯಮ ಸಚಿವಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿ ಉತ್ತರ ನೀಡಿದ್ದರು. ಬಾಲಸುಬ್ರಹ್ಮಣ್ಯ ಪ್ರಸಾದ್ ಅವರು ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ, ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ಹಾಗೂ ಅರಣ್ಯ ಇಲಾಖೆಯಲ್ಲಿ ಪರಿಶೀಲನೆ ಮಾಡುವಂತೆ ಸೂಚಿಸಿದ್ದರು. ಆದರೆ, ಅಲ್ಲಿಯೂ ಕಾರ್ಯಪಾಲನಾ ವರದಿ ಲಭ್ಯವಿಲ್ಲ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉತ್ತರ ನೀಡಿದ್ದರು. ಪ್ರಕರಣಕ್ಕೆ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಅಧೀನ ಕಾರ್ಯದರ್ಶಿ ಮೊಹಮ್ಮದ್ ಇಬ್ರಾಹಿಂ ಅವರಿಗೆ ₹25 ಸಾವಿರ ದಂಡ ವಿಧಿಸಲಾಗಿತ್ತು. ಅರ್ಜಿದಾರರಿಗೆ ₹3 ಸಾವಿರ ಪರಿಹಾರ ನೀಡಲು ಆಯೋಗ ಆದೇಶ ನೀಡಿತ್ತು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಕೆ.ವಿ. ತ್ರಿಲೋಕ ಚಂದ್ರ ಅವರಿಗೆ ಈ ಬಗ್ಗೆ ವಿಚಾರಣೆ ನಡೆಸಿ, ಅನುಪಾಲನಾ ವರದಿ ಸಲ್ಲಿಸಲು ಉನ್ನತ ಅಧಿಕಾರಿಗಳ ನೇತೃತ್ವದ ಸಮಿತಿ ರಚನೆ ಮಾಡುವಂತೆ ನಿರ್ದೇಶನ ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.