ADVERTISEMENT

ಟಿವಿ ಚಾನೆಲ್‌ಗಳ ಕಾರ್ಯಕ್ರಮ ಮೇಲ್ವಿಚಾರಣೆಗೆ 30 ಜಿಲ್ಲೆಗಳಲ್ಲಿ ಸಮಿತಿ: ಸರ್ಕಾರ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 2:29 IST
Last Updated 13 ಫೆಬ್ರುವರಿ 2020, 2:29 IST
   

ಬೆಂಗಳೂರು: ‘ಖಾಸಗಿ ಟಿ.ವಿ ಚಾನೆಲ್‌ಗಳಲ್ಲಿ ಅಸಭ್ಯ ಹಾಗೂ ಕೀಳು ಅಭಿರುಚಿಯ ಕಾರ್ಯಕ್ರಮ ಪ್ರಸಾರ ನಿಯಂತ್ರಿಸುವ ದಿಸೆಯಲ್ಲಿ ರಾಜ್ಯದ 30 ಜಿಲ್ಲೆಗಳಲ್ಲೂ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ’ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯ ಹಾಗೂ ಜಿಲ್ಲಾ ಮಟ್ಟದ ಮೇಲ್ವಿಚರಣಾ ಸಮಿತಿ ರಚನೆ ಕೋರಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಖಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲ ವಿ.ಶ್ರೀನಿಧಿ, ಜಿಲ್ಲಾ ಸಮಿತಿ ರಚನೆಯಾದ ದಿನಾಂಕ, ನಡೆಸಿರುವ ಸಭೆ, ದಾಖಲಾದ ದೂರುಗಳ ಬಗ್ಗೆ ಮಾಹಿತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ADVERTISEMENT

ಈ ಕುರಿತ ಮೆಮೊ ದಾಖಲಿಸಿಕೊಂಡ ನ್ಯಾಯಪೀಠ, ‘ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳು ಮಾರ್ಚ್ 31ರ ವೇಳೆಗೆ ಎಷ್ಟು ಸಭೆ ನಡೆಸಿವೆ, ಎಷ್ಟು ದೂರು ದಾಖಲಾಗಿವೆ, ಈ ಸಂಬಂಧ ಸಮಿತಿ ಕೈಗೊಂಡ ಕ್ರಮಗಳೇನು ಎಂಬ ಬಗ್ಗೆ ವರದಿ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್‌ಗೆ ಮುಂದೂಡಿದೆ.

‘ಖಾಸಗಿ ಟಿ.ವಿ. ಚಾನೆಲ್‌ ಕಾರ್ಯಕ್ರಮಗಳ ಬಗ್ಗೆ ಆಕ್ಷೇಪಣೆಗಳಿದ್ದರೆ ಸಾರ್ವಜನಿಕರು ಸ್ಥಿರ ದೂರವಾಣಿ ಸಂಖ್ಯೆ 080-22028013ಗೆ ಅಥವಾ ವಾಟ್ಸ್‌ ಆ್ಯಪ್ ಮೂಲಕ (94808–41212) ದೂರು ನೀಡಬಹುದು. ದೂರು ನಿರ್ವಹಣೆಗೆ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ನಿಯಂತ್ರಣ ಕೊಠಡಿ ತೆರೆಯಲಾಗಿದೆ’ ಎಂದು 2019ರ ಡಿಸೆಂಬರ್ 16ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.