ADVERTISEMENT

ವೈದ್ಯ ವಿದ್ಯಾರ್ಥಿ ಮೇಲೆ ಹಲ್ಲೆ: ಮೂವರ ಬಂಧನ

ಹಿಂದೂ ಯುವತಿ, ಮುಸ್ಲಿಂ ಯುವಕ ಜೊತೆಗಿದ್ದುದಕ್ಕೆ ದಾಂಧಲೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 10:30 IST
Last Updated 17 ನವೆಂಬರ್ 2019, 10:30 IST

ಸುರತ್ಕಲ್‌: ನಗರದ ಹೊರವಲಯದ ಮುಕ್ಕ ಬೀಚ್‌ ಬಳಿ ಮಂಗಳವಾರ ರಾತ್ರಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಜೊತೆಗಿದ್ದುದನ್ನು ಆಕ್ಷೇಪಿಸಿ ಮತೀಯ ಗೂಂಡಾಗಿರಿ ಪ್ರದರ್ಶಿಸಿದ ಗುಂಪೊಂದು, ಯುವಕನ ಮೇಲೆ ಹಲ್ಲೆ ನಡೆಸಿದೆ. ಈ ಸಂಬಂಧ ಮೂವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಮುಕ್ಕದಲ್ಲಿರುವ ಶ್ರೀನಿವಾಸ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿರುವ ಕೇರಳದ ಕೋಯಿಕ್ಕೋಡ್‌ ಜಿಲ್ಲೆಯ ನಿವಾಸಿ ಅಬ್ದುಲ್‌ ರಹಿಮಾನ್‌ ಬಸಿರತ್‌ ಹಲ್ಲೆಗೊಳಗಾದವರು. ಹಲ್ಲೆ ನಡೆಸಿದ ಆರೋಪದ ಮೇಲೆ ಸುನೀಲ್‌ (40), ವಸಂತ್‌ (42) ಮತ್ತು ಸುಕೀತ್‌ (23) ಎಂಬುವವರನ್ನು ಸುರತ್ಕಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರು ಕೃತ್ಯದಲ್ಲಿ ಭಾಗಿಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಅಬ್ದುಲ್‌ ರಹಿಮಾನ್‌ ಬಸಿರತ್‌ ತನ್ನ ಸಹಪಾಠಿಯಾಗಿರುವ ಹಿಂದೂ ವಿದ್ಯಾರ್ಥಿನಿ ಜೊತೆ ಬೀಚ್‌ಗೆ ಬಂದಿದ್ದರು. ಮಂಗಳವಾರ ರಾತ್ರಿ 8 ಗಂಟೆಗೆ ಸುಮಾರಿಗೆ ಅಲ್ಲಿಗೆ ಬಂದ ಗುಂಪು, ‘ಹಿಂದೂ ಹುಡುಗಿಯನ್ನು ಕರೆದುಕೊಂಡು ಏಕೆ ಬಂದಿದ್ದೀಯಾ’ ಎಂದು ಅಬ್ದುಲ್‌ ರಹಿಮಾನ್‌ ಅವರನ್ನು ಪ್ರಶ್ನಿಸಿದೆ. ಕೆಲವರು ಅವರ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ.

ADVERTISEMENT

ವಿದ್ಯಾರ್ಥಿಗಳಿಬ್ಬರನ್ನೂ ಈ ಗುಂಪು ತಮ್ಮ ವಶದಲ್ಲಿ ಹಿಡಿದಿಟ್ಟುಕೊಂಡಿತ್ತು. ಕಾಲೇಜಿನ ಪ್ರಾಧ್ಯಾಪಕ ಡಾ.ಸತೀಶ್‌ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಅವರಿಗೆ ಒಪ್ಪಿಸಿದೆ. ಬಳಿಕ ಹಲ್ಲೆಗೊಳಗಾದ ವಿದ್ಯಾರ್ಥಿಯ ಸ್ನೇಹಿತ ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಇನ್ನಷ್ಟು ಜನರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಕೃತ್ಯದಲ್ಲಿ ಭಾಗಿಯಾದ ಯಾರನ್ನೂ ಬಿಡುವುದಿಲ್ಲ’ ಎಂದು ನಗರ ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.