ಬೆಂಗಳೂರು: ‘ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ. ತಿಮ್ಮೇಗೌಡ ಮತ್ತು ಪದಾಧಿಕಾರಿಗಳು ಬಾಹ್ಯಶಕ್ತಿಗಳ ಒತ್ತಡಕ್ಕೆ ಮಣಿದು ಸಮುದಾಯವನ್ನೇ ಒಡೆಯುವಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ್ ಆರೋಪಿಸಿದ್ದಾರೆ.
‘ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಮಧಾರಿಗಳ ಸಂಘ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ದೀವರು ಪ್ರತ್ಯೇಕ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಸಮುದಾಯದ ಸ್ವಾಮೀಜಿ ಯಾರು ಎಂಬುದನ್ನು ನಿರ್ಧರಿಸುವ ಯಾವ ಅಧಿಕಾರವೂ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘಕ್ಕೆ ಇಲ್ಲ’ ಎಂದಿದ್ದಾರೆ.
‘ಈಡಿಗ, ಬಿಲ್ಲವ, ನಾಮಧಾರಿ, ದೀವರು ಸೇರಿದಂತೆ 26 ಉಪ ಪಂಗಡಗಳ ನೇತೃತ್ವದಲ್ಲಿ ಸೆ.9ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾನ ಮನಸ್ಕರ ಪೂರ್ವಭಾವಿ ಸಭೆ ಯಶಸ್ಸು ಕಂಡಿದೆ. ಇದರಿಂದ ವಿಚಲಿತರಾಗಿರುವ ಕೆಲವರು ಸಭೆಯ ನೇತೃತ್ವ ವಹಿಸಿದ್ದವರ ವಿರುದ್ಧ ಅಪಪ್ರಚಾರಕ್ಕೆ ಇಳಿದಿದ್ದಾರೆ. ಪ್ರಣವಾನಂದ ಸ್ವಾಮೀಜಿ ವಿರುದ್ಧ ಹೇಳಿಕೆ ನೀಡಿರುವುದೂ ಇದರ ಭಾಗ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.