ADVERTISEMENT

ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ: ಬಿಜೆಪಿಯಲ್ಲಿ ಪೈಪೋಟಿ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 21:30 IST
Last Updated 17 ಮಾರ್ಚ್ 2020, 21:30 IST
   

ಬೆಂಗಳೂರು: ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ಎಂ.ಕೃಷ್ಣಾ ರೆಡ್ಡಿ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ.

ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಸವದತ್ತಿ ಯಲ್ಲಮ್ಮ ಕ್ಷೇತ್ರದ ಆನಂದ ಮಾಮನಿ ಅವರ ಹೆಸರು ಕೇಳಿ ಬಂದಿವೆ. ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದ ಬಳಿಕ ಉಪಸಭಾಧ್ಯಕ್ಷ ಹುದ್ದೆಗೆ ಪಕ್ಷದ ಶಾಸಕರನ್ನೇ ಆಯ್ಕೆ ಮಾಡಬೇಕು ಎಂಬ ಕೂಗು ಕೇಳಿ ಬಂತು. ಸ್ವತಃ ಆನಂದ ಮಾಮನಿಯವರೇ ಉಪಸಭಾಧ್ಯಕ್ಷ ಸ್ಥಾನದ ಬಗ್ಗೆ ಒಲವು ವ್ಯಕ್ತಪಡಿಸಿದ್ದರು.

ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕೆ.ಆರ್‌.ರಮೇಶ್‌ ಕುಮಾರ್‌ ಸಭಾಧ್ಯಕ್ಷರಾಗಿ ಹಾಗೂ ಕೃಷ್ಣಾ ರೆಡ್ಡಿ ಉಪ ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮೈತ್ರಿ ಸರ್ಕಾರ ಪತನದ ಬಳಿಕ ರಮೇಶ್‌ ಕುಮಾರ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಕೃಷ್ಣಾ ರೆಡ್ಡಿ ಹುದ್ದೆಯಲ್ಲಿ ಮುಂದುವರಿದಿದ್ದರು. ಕೃಷ್ಣಾ ರೆಡ್ಡಿ ವಿರುದ್ಧ ಬಿಜೆಪಿಯ ಮಹಾಂತೇಶ ದೊಡ್ಡಗೌಡರ ಹಾಗೂ ಇತರ ಸದಸ್ಯರು ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿಸಲು ಸಿದ್ಧತೆ ನಡೆಸಿದ್ದರು. ಈ ವಿಚಾರ ವಿಧಾನಸಭೆಯ ಕಾರ್ಯಕಲಾಪ ಪಟ್ಟಿಯಲ್ಲಿ ಇತ್ತು. ಕೃಷ್ಣಾ ರೆಡ್ಡಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಂದು ಕಾಗೇರಿ ಸದನದಲ್ಲಿ ಪ್ರಕಟಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.