ADVERTISEMENT

ಸ್ಪರ್ಧಾತ್ಮಕ ಪರೀಕ್ಷೆ: ಒಬಿಸಿ ಅಭ್ಯರ್ಥಿಗಳ ಪರದಾಟ

ಪ್ರಕಟಗೊಳ್ಳದ ಪರೀಕ್ಷಾ ಪೂರ್ವ ತರಬೇತಿ ಆಯ್ಕೆ ಪಟ್ಟಿ

ಬಸವರಾಜ ಹವಾಲ್ದಾರ
Published 28 ಡಿಸೆಂಬರ್ 2019, 21:05 IST
Last Updated 28 ಡಿಸೆಂಬರ್ 2019, 21:05 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ಹುಬ್ಬಳ್ಳಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕೊಡಿಸುವ ಸಲುವಾಗಿ ಹಿಂದುಳಿದ ವರ್ಗಗಳ ಇಲಾಖೆಯು ನಡೆಸಿದ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿ ಎರಡು ತಿಂಗಳಾಗಿದೆ. ಆದರೆ ಅಭ್ಯರ್ಥಿಗಳ ಆಯ್ಕೆಗೆ ಕೌನ್ಸೆಲಿಂಗ್ ನಡೆಸದ ಕಾರಣ ಉನ್ನತ ಹುದ್ದೆ ನಿರೀಕ್ಷೆಯಲ್ಲಿರುವ ಸಾವಿರಾರು ಬಡ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವಂತಾಗಿದೆ.

ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿಂದ ಸೆ.8ರಂದು ಪರೀಕ್ಷೆ ನಡೆಸಲಾಗಿತ್ತು. ಅ.14ರಂದು ಫಲಿತಾಂಶ ಪ್ರಕಟಿಸಲಾಗಿದೆ. ಆದರೆ, ಇಲ್ಲಿಯವರೆಗೂ ಅಭ್ಯರ್ಥಿಗಳ ಆಯ್ಕೆಯಾಗಿಲ್ಲ. ತರಬೇತಿಗಾಗಿ ಅಭ್ಯರ್ಥಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಯುಪಿಎಸ್‌ಸಿ, ಕೆಪಿಎಸ್‌ಸಿ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳ ಪೂರ್ವ ತರಬೇತಿಗಾಗಿ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಸಮಾಜ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳು, ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿಗಾಗಿ ದೆಹಲಿ, ಹೈದರಾಬಾದ್‌, ಬೆಂಗಳೂರಿಗೆ ಈಗಾಗಲೇ ಕಳುಹಿಸಿಕೊಟ್ಟಿವೆ. ಆದರೆ, ಹಿಂದುಳಿದ ವರ್ಗಗಳ ಇಲಾಖೆ ಮಾತ್ರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿಲ್ಲ.

ADVERTISEMENT

‘ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಅಂಕಗಳೂ ಬಂದಿವೆ. ಆದರೆ, ಕೌನ್ಸೆಲಿಂಗ್‌ ಮಾಡಿ ಪಟ್ಟಿ ಪ್ರಕಟಿಸದ ಕಾರಣ ಏನು ಮಾಡಬೇಕು ಎಂಬುದು ತಿಳಿಯದಾಗಿದೆ. ಇಲಾಖೆಯಲ್ಲಿ ವಿಚಾರಿಸಿದರೆ ಅಧಿಕಾರಿಗಳು ಇಂದು, ನಾಳೆ ಎನ್ನುತ್ತಾರೆ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ಅಭ್ಯರ್ಥಿಯೊಬ್ಬರು ಅಳಲು ತೋಡಿಕೊಂಡರು.

*
ಆನ್‌ಲೈನ್‌ನಲ್ಲಿ ಅರ್ಜಿ ಕರೆದಿರುತ್ತಾರೆ. ಫಲಿತಾಂಶ ಪ್ರಕಟಿಸಲಾಗಿದೆ. ಬೆಂಗಳೂರು ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಬೇಕಿದೆ. ಶೀಘ್ರ ಪಟ್ಟಿ ಪ್ರಕಟಿಸಬಹುದು
–ಅಜ್ಜಪ್ಪ, ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಇಲಾಖೆ, ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.