ಬೆಂಗಳೂರು: 'ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧವಾಗಿದ್ದು, ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಸೂಚನೆ ನೀಡಿದ್ದೇನೆ' ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಬುಧವಾರ ಇಲ್ಲಿ ಕಾರವಾನ್ (ಮಿನಿಬಸ್) ಪ್ರವಾಸೋದ್ಯಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, 'ಪ್ರವಾಸೋದ್ಯಮ ಅತಿ ಹೆಚ್ಚು ಉದ್ಯೋಗಗಳನ್ನು ಸೃಜಿಸುವ ಉದ್ಯಮವಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಹಿನ್ನಡೆ ಉಂಟಾಗಿದೆ. ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ' ಎಂದರು.
'ರಾಜ್ಯದ ಜಿಡಿಪಿಗೆ ಪ್ರವಾಸೋದ್ಯಮದ ಕೊಡುಗೆ ಶೇ 14 ರಷ್ಟಿದ್ದು, ಮುಂದಿನ ದಿನಗಳಲ್ಲಿ ಇದನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ. ಕೋವಿಡ್-19ರ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಕಾರವಾನ್ (ಮಿನಿ ಬಸ್) ಪ್ರವಾಸೋದ್ಯಮಕ್ಕೆ ಇಂದು ಚಾಲನೆ ನೀಡಲಾಗಿದೆ. ಕಾರವಾನ್ ಪ್ರವಾಸೋದ್ಯಮ ಪರಿಕಲ್ಪನೆಯು ಸ್ವತಂತ್ರ ತಿರುಗಾಟದ ಅನುಭವಕ್ಕಾಗಿ ಅತ್ಯಂತ ಜನಪ್ರಿಯವಾಗಿದೆ' ಎಂದು ಹೇಳಿದರು.
'ಪ್ರವಾಸದ ಅವಧಿಯಲ್ಲಿ ಸೂಕ್ತ ರಕ್ಷಣೆ, ಅಂತರವನ್ನು ಕಾಯ್ದುಕೊಳ್ಳಲು ಕಾರವಾನನಲ್ಲಿ ಪ್ರವಾಸ ಕೈಗೊಳ್ಳುವುದು ಸೂಕ್ತವಾಗಿದೆ. ಕಾರವಾನ್ಗಳ ನಿಲುಗಡೆಗೆ ಪ್ರಾಥಮಿಕ ಹಂತದಲ್ಲಿ ರಾಜ್ಯ ಸರ್ಕಾರದ ಸಂಸ್ಥೆಗಳಾದ ಅರಣ್ಯ ವಸತಿ ಮತ್ತು ವಿಹಾರಧಾಮ ಹಾಗೂ ಕೆ.ಎಸ್.ಟಿ.ಡಿ.ಸಿ ಘಟಕಗಳ ಆವರಣದಲ್ಲಿ ಸೌಲಭ್ಯ ಒದಗಿಸಲಾಗುವುದು. ಪ್ರಾಥಮಿಕ ಹಂತದಲ್ಲಿ ಹಂಪಿ, ಗೋಕರ್ಣ, ಬಾದಾಮಿ, ಕುದುರೆಮುಖ, ಸಕಲೇಶಪುರ, ಬೇಲೂರು, ಹಳೇಬೀಡು, ಸಕ್ರೆಬೈಲು ಹಾಗೂ ಕೊಡಗು ಪ್ರವಾಸಿ ತಾಣಗಳಲ್ಲಿ ಕಾರವಾನ್ಗಳನ್ನು ನಿಯೋಜಿಸಲಾಗುವುದು. ರಾಜ್ಯದ ನೂತನ ಪ್ರವಾಸಿ ನೀತಿಯನ್ವಯ ಇನ್ನೂ ಹೆಚ್ಚಿನ ಪ್ರವಾಸಿ ತಾಣಗಳಲ್ಲಿ ಕಾರವಾನ್ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಲಾಗುವುದು' ಎಂದು ಮುಖ್ಯಮಂತ್ರಿ ವಿವರಿಸಿದರು.
'ಕಳೆದ ವಾರವಷ್ಟೇ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಕರೆದು ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ಕೋವಿಡ್-19 ನಿಂದಾಗಿ ಪ್ರವಾಸೋದ್ಯಮ ವಲಯದಲ್ಲಿ ಸುಮಾರು ₹ 15 ಸಾವಿರ ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ರಾಜ್ಯಕ್ಕೆ ಪ್ರವಾಸಿಗರನ್ನು ಆಕರ್ಷಿಸುವ, ಅತ್ಯುತ್ತಮ ಪ್ರವಾಸಿ ಗಮ್ಯವಾಗಿಸುವ ನಿಟ್ಟಿನಲ್ಲಿ ಎಲ್ಲ ಪಾಲುದಾರರೂ ಕೈಜೋಡಿಸಬೇಕು. ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕಾರವಾನ್ ಪ್ರವಾಸೋದ್ಯಮ ಇದಕ್ಕೆ ಪೂರಕವಾಗಲಿದೆ ಎಂದು ಆಶಿಸುತ್ತೇನೆ' ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.