ADVERTISEMENT

ಒಮ್ಮತದ ಆಯ್ಕೆಗೆ ‘ಕೈ’ ಕಸರತ್ತು: ಸಂಭವನೀಯ ಅಭ್ಯರ್ಥಿ ಪಟ್ಟಿಯ ಚರ್ಚೆ

ಚೀಟಿಯಲ್ಲಿ ಸಲಹೆ ಸ್ವೀಕಾರಕ್ಕೆ ಆಕ್ಷೇಪ *

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2023, 19:31 IST
Last Updated 2 ಫೆಬ್ರುವರಿ 2023, 19:31 IST
ಸಭೆಯಲ್ಲಿ ಸಿದ್ದರಾಮಯ್ಯ, ರಣದೀಪ್ ಸಿಂಗ್‌ ಸುರ್ಜೇವಾಲಾ, ಡಿ.ಕೆ. ಶಿವಕುಮಾರ್
ಸಭೆಯಲ್ಲಿ ಸಿದ್ದರಾಮಯ್ಯ, ರಣದೀಪ್ ಸಿಂಗ್‌ ಸುರ್ಜೇವಾಲಾ, ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ಗೆಲುವೊಂದೇ ಮಾನದಂಡ’ ಎಂಬ ಸೂತ್ರದಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ನ ಚುನಾವಣಾ ಸಮಿತಿ ಸದಸ್ಯರು, ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ದೇವನಹಳ್ಳಿಯ ಕ್ಲಾರ್ಕ್ ಎಕ್ಷಾರ್ಟಿಕ ಹೋಟೆಲ್‌ನಲ್ಲಿ ಗುರುವಾರ ಸುಮಾರು ಮೂರು ತಾಸು ಸಮಾಲೋಚನೆ ನಡೆಸಿದರು.‌

ಗುರುವಾರದ ಸಭೆಗೂ ಮೊದಲೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜೊತೆ ಬುಧವಾರ ತಡರಾತ್ರಿವರೆಗೆ ಸಮಾಲೋಚನೆ ನಡೆಸಿದ್ದ ಸುರ್ಜೇವಾಲಾ, ಚುನಾವಣಾ ಸಮಿತಿ ಸಭೆಯ ಬಳಿಕ ಮತ್ತೊಮ್ಮೆ ಇಬ್ಬರು ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು. ಆ ಮೂಲಕ, ಇಬ್ಬರ ಜೊತೆ ಚರ್ಚಿಸಿ, ಸಹಮತ ಮೂಡಿಸಿ ಸಂಭವನೀಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ಕಸರತ್ತು ನಡೆಸಿದರು.

‘ಪಕ್ಷದ ಹಾಲಿ ಶಾಸಕರು ಪ್ರತಿನಿಧಿಸುವ ಕ್ಷೇತ್ರವೂ ಸೇರಿ 120ರಿಂದ 130 ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳನ್ನು ಪಟ್ಟಿಯನ್ನು ಅಂತಿಮಗೊಳಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಪಕ್ಷ ಮಾಜಿ ಶಾಸಕರ ಕ್ಷೇತ್ರಗಳು ಮತ್ತು ಕಗ್ಗಂಟಾಗಿರುವ ಕೆಲವು ಕ್ಷೇತ್ರಗಳಲ್ಲಿ ಏನು ಮಾಡಬೇಕೆಂಬ ಬಗ್ಗೆಯೂ ಗಂಭೀರ ಮಾತುಕತೆ ನಡೆಯಿತು’ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ADVERTISEMENT

‘ಸಮಿತಿಯ ಎಲ್ಲ ಸದಸ್ಯರಿಂದ ಟಿಕೆಟ್‌ ಆಕಾಂಕ್ಷಿಗಳ ಕುರಿತು ಸುರ್ಜೇವಾಲಾ ಅಭಿಪ್ರಾಯ ಪಡೆದರು. ಇನ್ನೂ ಆಕಾಂಕ್ಷಿಗಳಿದ್ದರೆ ಚೀಟಿಯಲ್ಲಿ ಅಭಿಪ್ರಾಯ ತಿಳಿಸುವಂತೆ ಕೂಡಾ ಸಲಹೆ ನೀಡಿದರು. ಇದಕ್ಕೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಎಲ್ಲವೂ ಮೊದಲೇ ತೀರ್ಮಾನ ಆದಂತಿದೆ. ಚೀಟಿ ಕೊಡುವುದಾದರೆ ಸಭೆಗೆ ಯಾಕೆ ಬರಬೇಕಿತ್ತು ಎಂದು ಕೆಲವರು ಆಕ್ಷೇಪಿಸಿದರು’ ಎಂದೂ ಮೂಲಗಳು ಹೇಳಿವೆ.

ಹಾಲಿ ಶಾಸಕರಿಗೆ ಟಿಕೆಟ್‌: ಸಭೆಯ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್‌, ‘ನಮ್ಮ ಪಕ್ಷದ ಎಲ್ಲ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಸಹಕಾರ ನೀಡದಿದ್ದರೂ ನಮ್ಮ ಶಾಸಕರು ಜನರ ಮಧ್ಯೆ ನಿಂತು ಕೆಲಸ ಮಾಡಿದ್ದಾರೆ. ಹೀಗಾಗಿ, ಬಹುತೇಕ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ’ ಎಂದರು.

‘ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಸವಾಲಾಗಿದೆಯಲ್ಲವೇ’ ಎಂಬ ಪ್ರಶ್ನೆಗೆ, ‘ಯಾವುದೇ ಸವಾಲು ಇಲ್ಲ. ನಮಗೆ ಗೆಲುವಿನ ಗುರಿ ಇದೆ. ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮತದಾರರು ವಿಶ್ವಾಸ ವ್ಯಕ್ತಪಡಿಸುತ್ತಿರುವುದರಿಂದ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ’ ಎಂದರು.

ಪಟ್ಟಿ ಪ್ರಕಟ ವಿಳಂಬ?

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಫೆ. 10ರ ಒಳಗೆ ಘೋಷಿಸಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ. ಆದಷ್ಟು ಬೇಗ ಪಟ್ಟಿ ಘೋಷಿಸಬೇಕೆಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಆದರೆ, ‌ಕೇಂದ್ರ ಚುನಾವಣಾ ಸಮಿತಿ, ಸ್ಕ್ರೀನಿಂಗ್ ಸಮಿತಿ ಇನ್ನಷ್ಟೆ ರಚನೆ ಆಗಬೇಕಿದೆ. ಈ ಸಮಿತಿಗಳು ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಹೀಗಾಗಿ, ಈ ತಿಂಗಳ ಕೊನೆಯಲ್ಲಿ ಪಟ್ಟಿ ಪ್ರಕಟ ಆಗಬಹುದು ಎಂದು ಕಾಂಗ್ರೆಸ್‌ ನಾಯಕರೊಬ್ಬರು ತಿಳಿಸಿದರು.

‘ನಾನು ಚುನಾವಣಾ ಸಮಿತಿಯಲ್ಲಿದ್ದೇನೆ. ಒಂದು ಕ್ಷೇತ್ರದಿಂದ ಎರಡರಿಂದ ಮೂರು ಹೆಸರು ಕಳುಹಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿ ಹೆಸರು ಅಂತಿಮಗೊಳ್ಳುತ್ತದೆ, ಮೊದಲ ಹಂತದಲ್ಲಿ 100 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ. ಫೆ. 15ರ ಒಳಗೆ ಪಟ್ಟಿ ಬಿಡುಗಡೆ ಶೇ 100ರಷ್ಟು ಖಚಿತ’ ಎಂದು ಕಾಂಗ್ರೆಸ್ ನಾಯಕ ಅಲ್ಲಂ ವೀರಭದ್ರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.