ಬೆಂಗಳೂರು: ‘ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಜಗಳದಿಂದ ಯಡಿಯೂರಪ್ಪ ಮಾಡಿರುವ ಭ್ರಷ್ಟಾಚಾರದ ಮಾಹಿತಿಯನ್ನೊಳಗೊಂಡ ಡೈರಿ ಹೊರಬಿದ್ದಿದ್ದು, ಆ ಡೈರಿಯನ್ನು ಈಶ್ವರಪ್ಪ ಆಪ್ತ ಸಹಾಯಕ (ಪಿಎ) ಪೊಲೀಸರಿಗೆ ನೀಡಿದ್ದಾರೆ. ಈ ಡೈರಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಈ ಡೈರಿ ವಿಚಾರ ಬಹಳ ಗಂಭೀರವಾಗಿದೆ. ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಏನು ಮಾಡುತ್ತಾರೆ ಎಂಬ ಕುತೂಹಲ ನಮಗೂ ಇದೆ’ ಎಂದರು.
‘ರಿಜ್ವಾನ್ ಅರ್ಷದ್ ನಕಲಿ ಗುರುತಿನ ಚೀಟಿಗಳನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದೂ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ದಾಖಲಾದ ಪ್ರಕರಣದಲ್ಲಿ ರಿಜ್ವಾನ್ ಹೆಸರು ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.
‘ಮೋದಿಗೆ ಮತ ಹಾಕದಿದ್ದವರು ತಾಯ್ಗಂಡ್ರು ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಹೇಳುತ್ತಾರೆಂದರೆ ಅವರ ಮನಸ್ಥಿತಿ ಎಷ್ಟು ಹೊಲಸಾಗಿದೆ ಎಂಬುದನ್ನು ಯೋಚಿಸಬೇಕಿದೆ. ರವಿ ನೀಡಿರುವ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.