ADVERTISEMENT

ರೈತರನ್ನು ಎತ್ತಿಕಟ್ಟಿ, ಅರಾಜಕತೆ ಸೃಷ್ಟಿಸಿ ಅಧಿಕಾರ ಪಡೆಯಲು ಕೈ ಹುನ್ನಾರ: ಕಟೀಲ್

ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಕಟೀಲ್‌

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 11:08 IST
Last Updated 20 ಡಿಸೆಂಬರ್ 2020, 11:08 IST
ನಳೀನ್‌ ಕುಮಾರ್‌ ಕಟೀಲ್‌
ನಳೀನ್‌ ಕುಮಾರ್‌ ಕಟೀಲ್‌   

ಬೆಂಗಳೂರು:ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಅಧಿಕಾರ ಹಿಡಿಯುವ ಹುನ್ನಾರ ನಡೆಸಿರುವ ಕಾಂಗ್ರೆಸ್‌ ಪಕ್ಷ ರೈತರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕಿಡಿ ಕಾರಿದರು.

ನಗರದಲ್ಲಿ ಭಾನುವಾರ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್‌ ರೈತರ ಹೆಸರಿನಲ್ಲಿ ಗಲಭೆ ರಾಜಕಾರಣ ಮಾಡುತ್ತಿದೆ. ರೈತರ ರಕ್ಷಣೆ ಮಾಡುವುದಕ್ಕೆ ಬದಲು ಅವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ಎನ್‌ಡಿಎ ಸರ್ಕಾರ ಜಾರಿ ಮಾಡಿರುವ ರೈತರ ಪರ ಯೋಜನೆಗಳ ವಿವರವನ್ನು ಮನೆ ಮನೆಗೆ ತಲುಪಿಸಬೇಕು. ಇದಕ್ಕೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಬೇಕು. ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನಕ್ಕೆ ಮುಂಚಿತವಾಗಿ ಎಲ್ಲರ ಮನೆಗಳಿಗೂ ಕರ ಪತ್ರಗಳನ್ನು ಹಂಚಬೇಕು. ಅಂದು ಪ್ರಧಾನಿ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ನಳಿನ್‌ ಹೇಳಿದರು.

ADVERTISEMENT

ಕೋವಿಡ್‌ ಸಂದರ್ಭದಲ್ಲಿ ತಬ್ಲಿಘಿಗಳ ಬೆನ್ನಿಗೆ ನಿಂತು ಗಲಭೆ ಮಾಡಿಸಿತ್ತು. ಪೌರತ್ವ ಕಾಯ್ದೆ ವಿರುದ್ಧ ನಡೆದ ಹೋರಾಟ ಮತ್ತು ದೆಹಲಿಯಲ್ಲಿ ನಡೆದ ಗಲಭೆಗೆ ಕಾಂಗ್ರೆಸ್‌ನ ಬೆಂಬಲವಿತ್ತು. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ಗಲಭೆ ಮಾಡಿಸಿದ್ದೂ ಇವರೇ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಇವರಿಗೆ ನಂಬಿಕೆ ಇಲ್ಲ. ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ನವರೇ ಗದ್ದಲ ನಡೆಸಿದ್ದು. ಇವೆಲ್ಲಾ ಕೃತ್ಯಗಳಿಗೆ ಜನರ ಬಳಿ ಕ್ಷಮೆ ಕೇಳಬೇಕು ಎಂದು ನಳಿನ್‌ ಒತ್ತಾಯಿಸಿದರು.

ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುವ ಭರದಲ್ಲಿ ಸಿದ್ದರಾಮಯ್ಯ ಕೊಡವರು ಮತ್ತು ಹಿಂದುಳಿದವರನ್ನು ಅಪಮಾನ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ವೋಟ್‌ ಬ್ಯಾಂಕ್‌ ಓಲೈಕೆಗಾಗಿ ಕೊಡವ ಸಮಾಜವನ್ನು ಅವಮಾನಿಸಿದ್ದಾರೆ. ಅವರು ಕೊಡವ ಸಮಾಜದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯತ್‌ ಸಭೆಯಲ್ಲಿ ಶೇ 80 ಕ್ಕೂ ಹೆಚ್ಚು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ. 1,16,000 ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಳಿನ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.