ಬೆಂಗಳೂರು: ಹಿಂದುಳಿದ ವರ್ಗಗಳ 2ಎ ಪಟ್ಟಿಗೆ ಸೇರಿಸುವಂತೆ ಪಂಚಮಸಾಲಿ ಸಮುದಾಯದವರು ಮತ್ತು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವಂತೆ ಕುರುಬ ಸಮುದಾಯದವರು ನಡೆಸುತ್ತಿರುವ ಪಾದಯಾತ್ರೆ ಕುರಿತು ಚರ್ಚೆಗೆ ಆಗ್ರಹಿಸಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರೂ ಪಕ್ಷಗಳ ಸದಸ್ಯರು ಮಂಗಳವಾರ ವಿಧಾನಸಭೆಯಲ್ಲಿ ಧರಣಿ ನಡೆಸಿದರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ, ಎರಡೂ ಸಮುದಾಯದ ಬೇಡಿಕೆ ಈಡೇರಿಸುವ ಕುರಿತು ಮುಖ್ಯಮಂತ್ರಿ ಸ್ಪಷ್ಟವಾದ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿದರು.
ಉತ್ತರ ನೀಡಿದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಕಾನೂನು, ಸಂವಿಧಾನ ದ ತೊಡಕುಗಳು ಇವೆ. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ವಿಷಯದ ಕುರಿತು ಅರ್ಧ ಗಂಟೆ ಕಾಲಾವಧಿ ಚರ್ಚೆ ನಿಗದಿ ಮಾಡುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಸಲಹ ನೀಡಿದರು. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒಪ್ಪಲಿಲ್ಲ.
ಸಭಾಧ್ಯಕ್ಷರ ಪೀಠದ ಎದುರು ಧಾವಿಸಿದ ಬಿಜೆಪಿಯ ಬಸನಗೌಡ ಪಾಟೀಲ, ಅರವಿಂದ ಬೆಲ್ಲದ್, ಕಾಂಗ್ರೆಸ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ರಾಘವೇಂದ್ರ ಹಿಟ್ನಾಳ್, ಜೆಡಿಎಸ್ ನ ಬಂಡೆಪ್ಪ ಕಾಶೆಂಪುರ, ವೆಂಕಟರಾವ್ ನಾಡಗೌಡ ಸೇರಿದಂತೆ ಹಲವು ಶಾಸಕರು ಧರಣಿ ಆರಂಭಿಸಿದರು. ಧರಣಿ ಸ್ಥಳಕ್ಕೆ ಧಾವಿಸುತ್ತಿದ್ದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಗದರಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಡೆದರು.
ಮತ್ತೆ ಎದ್ದು ನಿಂತ ಸಚಿವ ಈಶ್ವರಪ್ಪ ಚರ್ಚೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಸಭಾಧ್ಯಕ್ಷರು ಒಪ್ಪಿಗೆ ಸೂಚಿಸಿದರು. ಶಾಸಕರು ಧರಣಿ ಹಿಂಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.