ADVERTISEMENT

ಬಿಜೆಪಿ ಶಾಸಕರಿಂದಲೇ ಫೋನ್ ಕದ್ದಾಲಿಕೆ ಆರೋಪ: ಸಮಗ್ರ ತನಿಖೆಗೆ ಕಾಂಗ್ರೆಸ್‌ ಒತ್ತಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜೂನ್ 2021, 5:48 IST
Last Updated 18 ಜೂನ್ 2021, 5:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಈ ವಿಚಾರವಾಗಿ ಶುಕ್ರವಾರ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, 'ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆ ಬಗ್ಗೆ ಆರೋಪ ಕೇಳಿ ಬಂದಿದೆ. ರಮೇಶ್ ಜಾರಕಿಹೊಳಿ ಪ್ರಕರಣದಲ್ಲೂ ವಕೀಲರ ಫೋನ್ ಕದ್ದಾಲಿಕೆಯಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು. ಈ ಸರ್ಕಾರ ಮಾಡಬೇಕಾದ ಕೆಲಸ ಬಿಟ್ಟು ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ.

‘ನನ್ನ ಫೋನ್‌ ಕರೆ ಕದ್ದಾಲಿಕೆಯಾಗುತ್ತಿದ್ದು, ಕಾಣದ ಕೈಗಳು ನನ್ನ ವಿರುದ್ಧ ಪಿತೂರಿ ನಡೆಸುತ್ತಿವೆ’ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಗುರುವಾರ ಆರೋಪಿಸಿದ್ದರು.

ADVERTISEMENT

ಫೋನ್‌ ಕದ್ದಾಲಿಕೆ ಸಂಬಂಧ ತನಿಖೆ ನಡೆಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಪೊಲೀಸ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವುದಾಗಿ ಬೆಲ್ಲದ್‌ ತಿಳಿಸಿದ್ದರು.

ಅರವಿಂದ್‌ ಬೆಲ್ಲದ್‌ ಆರೋಪದ ಬಗ್ಗೆ ಟ್ವೀಟ್‌ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 'ತಮ್ಮ ಪೋನ್ ಟ್ಯಾಪ್ ಆಗಿದೆ ಎಂದು ಬಿಜೆಪಿಯ ಭಿನ್ನಮತೀಯ ಶಾಸಕ ಅರವಿಂದ್ ಬೆಲ್ಲದ್‌ ಆರೋಪಿಸಿದ್ದಾರೆ. ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು' ಎಂದು ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.