ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಿಗೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯಲಿವೆ ಎಂಬ ವದಂತಿಗಳು ಹರಿದಾಡುತ್ತಿರುವಾಗಲೇ ಪರಿಸ್ಥಿತಿ ನಿಭಾಯಿಸಲು ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬರುತ್ತಿದ್ದಾರೆ.
ಭಾನುವಾರ ಬೆಳಿಗ್ಗೆ ನಗರಕ್ಕೆ ಬರಲಿರುವ ಅವರು, ಬಳಿಕ ಕುಂದಗೋಳಕ್ಕೆ ತೆರಳಿ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸುವರು. ಸೋಮವಾರ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಜೊತೆ ಇನ್ನಷ್ಟು ಶಾಸಕರು ರಾಜೀನಾಮೆ ನೀಡದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯ ನಾಯಕರ ಜೊತೆ ವೇಣುಗೋಪಾಲ್ ವಿಚಾರ ವಿನಿಮಯ ನಡೆಸುವ ಸಾಧ್ಯತೆ ಇದೆ. ಭಾನುವಾರ ರಾತ್ರಿ ಮುಖ್ಯಮಂತ್ರಿ ಎಚ್.ಡಿ .ಕುಮಾರಸ್ವಾಮಿ ಅವರನ್ನು ವೇಣುಗೋಪಾಲ್ ಭೇಟಿ ಮಾಡುವ ಸಾಧ್ಯತೆಯೂ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಸಮಾನ ಮನಸ್ಕರ ಸಭೆ 21ರಂದು?: ಕಾಂಗ್ರೆಸ್ನ ಸಮಾನ ಮನಸ್ಕ ಶಾಸಕರು ಇದೇ 21ರಂದು ಒಂದೆಡೆ ಸೇರಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರು ಈ ಹಿಂದೆ ಸಭೆ ಕರೆದಿದ್ದು, ಬಳಿಕ ಉಪಚುನಾವಣೆ ಇದ್ದುದರಿಂದ ಸಭೆ ಮುಂದೂಡಿಕೆಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.