
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಎಸ್ಪಿ ಟಿಎಸ್ಪಿ ಅನುದಾನವನ್ನು ರಾಜ್ಯ ಸರ್ಕಾರ ಬಳಕೆ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಡ ಹೇರಲು ದಲಿತ ಸಚಿವರು, ಶಾಸಕರು ನಿರ್ಧರಿಸಿದ್ದಾರೆ.
ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ 20ಕ್ಕೂ ಹೆಚ್ಚು ದಲಿತ ಸಚಿವರು, ಶಾಸಕರು ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಎಸ್ಸಿಎಸ್ಪಿ ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಜೆಟ್ನಲ್ಲಿ ಮೀಸಲಿಡುವುದಕ್ಕೆ ಈ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಯಿತು ಎಂದು ಗೊತ್ತಾಗಿದೆ.
ಸಚಿವರಾದ ಎಚ್.ಸಿ. ಮಹದೇವಪ್ಪ, ಶಿವರಾಜ ತಂಗಡಗಿ, ಕೆ.ಎಚ್. ಮುನಿಯಪ್ಪ, ಆರ್.ಬಿ. ತಿಮ್ಮಾಪೂರ, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಎಸ್.ಎ. ನಾರಾಯಣಸ್ವಾಮಿ, ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಪಾವಗಡದ ವೆಂಕಟೇಶ್ ಸೇರಿ 20ಕ್ಕೂ ಹೆಚ್ಚು ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.
‘ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ 2025-26ನೇ ಸಾಲಿನ ಬಜೆಟ್ನಲ್ಲಿ ₹ 40 ಸಾವಿರ ಕೋಟಿಗೂ ಹೆಚ್ಚು ಅನುದಾನ ಒದಗಿಸಿರುವುದಾಗಿ ಪ್ರಚಾರ ಮಾಡುತ್ತಿದ್ದೇವೆ. ಆದರೆ, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 11 ಸಾವಿರ ಕೋಟಿಗೂ ಹೆಚ್ಚಿನ ಹಣ ಬಳಕೆ ಮಾಡಲಾಗಿದೆ. ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಿಡುವ ಅನುದಾನವನ್ನು ಈ ರೀತಿ ಬಳಸಿದರೆ, ಯಾವ ಮುಖ ಇಟ್ಟುಕೊಂಡು ನಾವು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಕೇಳಬೇಕು’ ಎಂದು ಕೆಲವು ಶಾಸಕರು ಆಕ್ರೋಶ ಹೊರ ಹಾಕಿದರು ಎಂದೂ ಗೊತ್ತಾಗಿದೆ.
ಒಳ ಮೀಸಲಾತಿಯ ಗೊಂದಲ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಒಳ ಮೀಸಲಾತಿ ಅನುಷ್ಠಾನ ಮಾಡುವ ಅಗತ್ಯವಿದೆ. ಜೊತೆಗೆ, ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಕಾನೂನು ತಿದ್ದುಪಡಿಯಾಗಿ ಸಂವಿಧಾನದ ಷೆಡ್ಯೂಲ್ ಒಂಬತ್ತಕ್ಕೆ ಸೇರಿಸಲು ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರುವ ಬಗ್ಗೆಯೂ ಸಮಾಲೋಚನೆ ನಡೆಯಿತು ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.