ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ರೈತರ ದಿಕ್ಕು ತಪ್ಪಿಸುತ್ತಿದೆ. ರೈತರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷದ ಡೋಂಗಿ ರಾಜಕಾರಣ ಖಂಡನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಕಿಡಿಕಾರಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಷ್ಟು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ರೈತರ ಕಷ್ಟ ಅರ್ಥ ಆಗಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಂದೂ ರೈತರ ಪರವಾಗಿ ಹೋರಾಟ ಮಾಡಿದವರಲ್ಲ, ಈಗ ರೈತರ ನೆನಪಾಗಿದೆ ಎಂದು ಆರೋಪಿಸಿದರು.
ಕಾಯ್ದೆಯಿಂದ ರೈತರಿಗೆ ಹೇಗೆ ಲಾಭವಾಗುತ್ತದೆ ಎಂಬುದು ನಮ್ಮಂಥ ರೈತ ಮಕ್ಕಳಿಗೆ ಅರ್ಥವಾಗುತ್ತದೆ. ವೈಯಕ್ತಿಕ ಹಿತಾಸಕ್ತಿಗೆ ಹೋರಾಟ ಮಾಡುವವರಿಗೆ ಇದು ಗೊತ್ತಾಗದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2011ರಲ್ಲಿ ರೈತಪರ ಬಜೆಟ್ ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರೈತರು ಬೆಳೆದ ಬೆಳೆಯ ಬೆಂಬಲ ಬೆಲೆಗಾಗಿ ₹ 1 ಲಕ್ಷ ಕೋಟಿ ನಿಧಿ ಇಟ್ಟಿದ್ದಾರೆ ಎಂದರು.
ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಮಾಧಾನ- ಅಸಮಧಾನ ಇದ್ದೇ ಇರುತ್ತೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲವನ್ನೂ ನೋಡಿಕೊಳ್ಳುತ್ತಾರೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.