ಬೆಂಗಳೂರು: ಕೋವಿಡ್ ಲಸಿಕೆಯ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಲಸಿಕೆ ಕುರಿತು ಅಪಪ್ರಚಾರ ಮಾಡಿದ ಕಾಂಗ್ರೆಸ್ ನಾಯಕರೇ ಈಗ ಲಸಿಕೆಗಾಗಿ ಪ್ರತಿಭಟನೆಯ ನಾಟಕ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಆರಂಭದಲ್ಲಿ ಲಸಿಕೆ ಸಂಶೋಧನೆಯ ಕುರಿತು ಕೇಂದ್ರ ಸರ್ಕಾರ ಪ್ರಕಟಿಸಿದಾಗ ಕಾಂಗ್ರೆಸ್ ನಾಯಕರು ಟೀಕಿಸಿದ್ದರು. ಕೋವಿಡ್ ಲಸಿಕೆ ‘ಡಿಸ್ಟಿಲ್ಡ್ ವಾಟರ್’ಗೆ ಸಮ ಎಂದು ಹೀಯಾಳಿಸಿದ್ದರು. ಈಗ ಅದೇ ಕಾಂಗ್ರೆಸ್ ಪಕ್ಷದ ಮಹಾನ್ ನಾಯಕರು ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ’ ಎಂದರು.
ಲಸಿಕೆ ಉತ್ಪಾದನೆ ಆರಂಭವಾದಾವ ಕಾಂಗ್ರೆಸ್ನ ಅಪಪ್ರಚಾರದಿಂದ ಜನರು ದೂರ ಉಳಿದರು. ಆಗ ಉತ್ಪಾದಕರು ವಿದೇಶಗಳಿಗೆ ಲಸಿಕೆ ರಫ್ತು ಮಾಡಿದರು. ಈಗ ದೇಶದ ಜನರಿಗೆ ಲಸಿಕೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿ ಸೃಷ್ಟಿಯಾಗಲು ಕಾಂಗ್ರೆಸ್ನವರ ಪಾತ್ರವೂ ಇದೆ ಎಂದು ಟೀಕಿಸಿದರು.
ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲು ₹ 100 ಕೋಟಿ ನೀಡುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಸ್ವಂತ ಹಣವೇನೂ ಅಲ್ಲ. ಸರ್ಕಾರ ನೀಡುವ ಶಾಸಕರು, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಲಸಿಕೆಗೆ ನೀಡುವುದಾಗಿ ಹೇಳಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.