ADVERTISEMENT

ಯಡಿಯೂರಪ್ಪ ವಿರುದ್ಧ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗಿಲ್ಲ: ರಾಘವೇಂದ್ರ

ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಬಿ.ವೈ. ರಾಘವೇಂದ್ರ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 4:07 IST
Last Updated 28 ಆಗಸ್ಟ್ 2022, 4:07 IST
ಬಿ.ವೈ. ರಾಘವೇಂದ್ರ
ಬಿ.ವೈ. ರಾಘವೇಂದ್ರ   

ಶಿಕಾರಿಪುರ: ‘ಬಗರ್‌ಹುಕುಂ ಸಾಗುವಳಿದಾರರ ಪರ ಹೋರಾಟ ಮಾಡಿದ ಶಾಸಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ನಾಯಕರಿಗೆ ಇಲ್ಲ’ ಎಂದು ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದರು.

‘ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಅರಣ್ಯ ಸಚಿವ ರಾಚಯ್ಯ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮಂಡಿಸಿದ ಮಸೂದೆಯನ್ನು ವಾಪಸ್‌ ಪಡೆಯುವಂತೆ ಅಧಿವೇಶನದಲ್ಲಿ ಯಡಿಯೂರಪ್ಪ ಹೋರಾಟ ಮಾಡಿದ ಪರಿಣಾಮ ಈ ಮಸೂದೆಯನ್ನು ಸರ್ಕಾರ ಮಂಡಿಸಲಿಲ್ಲ. ಸಾಗುವಳಿದಾರರ ಪರ ಪಾದಯಾತ್ರೆ ಮಾಡಿದ್ದಾರೆ. ಸಾಗುವಳಿದಾರರನ್ನು ರಕ್ಷಣೆ ಮಾಡಿದ್ದು, ಯಡಿಯೂರಪ್ಪ ಹೊರತು 70 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ನಾಯಕರಲ್ಲ’ ಎಂದು ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.

‘ಸಂಸದನಾಗಿ ಅರಣ್ಯ ಸಾಗುವಳಿದಾರರ ಪರ ಸಂಸತ್ತಿನಲ್ಲಿ ಮಾತನಾಡಿದ್ದೇನೆ. ಕೇಂದ್ರ ಅರಣ್ಯ ಸಚಿವ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ರೈತರನ್ನು ಒಕ್ಕಲೆಬ್ಬಿಸದೇ ಸೂಕ್ತ ಕಾನೂನು ರೂಪಿಸಲು ಮನವಿ ಮಾಡಿದ್ದೇನೆ. ಬಗರ್‌ಹುಕುಂ ಸಾಗುವಳಿದಾರರಿಗೆ ಹೆಚ್ಚು ಹಕ್ಕುಪತ್ರವನ್ನು ತಾಲ್ಲೂಕಿನಲ್ಲಿ ನೀಡಿದ್ದೇವೆ. ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡಿಲ್ಲ. ಪ್ರಾಮಾಣಿಕವಾಗಿ ತಾಲ್ಲೂಕಿನಲ್ಲಿ ರೈತರ ಪರ ಯಡಿಯೂರಪ್ಪ ಹೋರಾಟ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.

ADVERTISEMENT

‘ಅರಣ್ಯ ಭೂಮಿ ಸಾಗುವಳಿದಾರರಿಗೆ ಭೂಕಬಳಿಕೆ ಹೆಸರಲ್ಲಿ ನೀಡಿರುವ ನೋಟಿಸ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾನು ಹಾಗೂ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ನಡೆಸಿದ್ದೆವು. ಚರ್ಚೆ ಪರಿಣಾಮ ರೈತರಿಗೆ ನೋಟಿಸ್ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಅಧಿವೇಶನದಲ್ಲಿ ಸೂಕ್ತ ಕಾನೂನು ರಚಿಸುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ. ಇ–ಸ್ವತ್ತಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಇ–ಸ್ವತ್ತು ವಿತರಣೆ ಸಮಸ್ಯೆ ಬಗೆಹರಿಯಲಿದೆ’ ಎಂದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ್ ಸಿಂಗ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಭದ್ರಾಪುರ ಹಾಲಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಜಿಲ್ಲಾ ರೈತ ಮೋರ್ಚಾ ಖಜಾಂಚಿ ಧಾರವಾಡ ಗಿರೀಶ್, ಪುರಸಭೆ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.