ನವದೆಹಲಿ: ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಅತ್ಯಾಚಾರದ ಕುರಿತು ನೀಡಿರುವ ಹೇಳಿಕೆಯನ್ನು ಪಕ್ಷದ ಹೈಕಮಾಂಡ್ ಶುಕ್ರವಾರ ಖಂಡಿಸಿದೆ.
‘ಕರ್ನಾಟಕ ವಿಧಾನಸಭೆಯ ಸ್ಪೀಕರ್ ಮತ್ತು ಕಾಂಗ್ರೆಸ್ ಶಾಸಕರ ನಡುವೆ ನಡೆದ ಆಕ್ಷೇಪಾರ್ಹ ಮತ್ತು ಸಂವೇದನಾರಹಿತ ವಿಚಾರ ವಿನಿಮಯವನ್ನು ಕಾಂಗ್ರೆಸ್ ಒಪ್ಪುವುದಿಲ್ಲ. ಸ್ಪೀಕರ್ ಮತ್ತು ಅನುಭವಿ ಶಾಸಕರು ಇತರರಿಗೆ ಮಾದರಿಯಾಗಿರಬೇಕು. ಆಕ್ಷೇಪಾರ್ಹ ನಡವಳಿಕೆಗಳಿಂದ ದೂರವಿರಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆಯಲ್ಲಿ ಗುರುವಾರ ನಡೆದ ಚರ್ಚೆಯ ವೇಳೆ ಶಾಸಕರ ಅಸಹಕಾರದ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದ್ದರು. ಎಷ್ಟು ಶಾಸಕರು ಬೇಕಾದರೂ ಮಾತನಾಡಲಿ, ನಾನು ಕೇಳುತ್ತಾ ಆನಂದಿಸುವುದನ್ನು ಬಿಟ್ಟರೆ ಇನ್ನೇನು ಮಾಡಲಿ. ಅಜೆಂಡಾದಲ್ಲಿರುವ ಬೇರೆ ಯಾವುದೇ ವಿಷಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದಕ್ಕೆ ಒಂದು ಮಾತಿದೆಯಲ್ಲವೇ, ರಮೇಶ್ ಕುಮಾರ್ ಎಂದು ಪ್ರಶ್ನಿಸಿದ್ದರು. ಇದಕ್ಕುತ್ತರಿಸಿದ್ದ ಕಾಂಗ್ರೆಸ್ ಶಾಸಕ, ‘ದೇರ್ ಈಸ್ ಎ ಸೇಯಿಂಗ್, ವೆನ್ ರೇಪ್ ಈಸ್ ಇನೆವಿಟೆಬಲ್ ಲೆಟ್ ಲೇ ಡೌನ್ ಅಂಡ್ ಎಂಜಾಯ್’ (ಅಂದರೆ, ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ) ಎಂದು ಹೇಳಿದ್ದರು. ಇದನ್ನು ಕೇಳಿ ಕಾಗೇರಿ ನಗಾಡಿದ್ದರು.
ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ರಮೇಶ್ ಕುಮಾರ್ ಕ್ಷಮೆ ಯಾಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.