ಚಿತ್ರದುರ್ಗ: ಆಂತರಿಕ ಕಿತ್ತಾಟವನ್ನು ಬದಿಗಿಟ್ಟು ಒಗ್ಗೂಡೋಣ. ಕಾಂಗ್ರೆಸ್ ಹೋರಾಟ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧವೇ ಹೊರತು ಪಕ್ಷದ ನಾಯಕರ ವಿರುದ್ಧವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ತಾಲ್ಲೂಕಿನ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಸ್ಮಾರಕದಲ್ಲಿ ಭಾನುವಾರ ನಡೆದ ಪಕ್ಷದ ನಾಯಕರ ಸಭೆಯಲ್ಲಿ ಅವರು ಮಾತನಾಡಿದರು.
‘ಪಕ್ಷದ ನಾಯಕರು ಪರಸ್ಪರ ಕಿತ್ತಾಟ ಮಾಡಿಕೊಂಡರೆ ಜನರಲ್ಲಿ ವಿಶ್ವಾಸ ಉಳಿಯದು. ಬಿಜೆಪಿ ದುರಾಡಳಿತದಿಂದ ಬೇಸತ್ತಿರುವ ಜನರು ಕಾಂಗ್ರೆಸ್ಗೆ ಮತ ನೀಡಲು ಸಿದ್ಧರಾಗಿದ್ದಾರೆ. ಕಾಂಗ್ರೆಸ್ ಮನೆ ಬಾಗಿಲಿಗೆ ಅಧಿಕಾರ ಬಂದಿದೆ. ಎಲ್ಲರೂ ಒಗ್ಗೂಡಿ ಅದನ್ನು ಸ್ವಾಗತಿಸಬೇಕು’ ಎಂದು ಸಲಹೆ ನೀಡಿದರು.
‘ಎಐಸಿಸಿ ವತಿಯಿಂದ ರಾಜ್ಯದಲ್ಲಿ ಇತ್ತೀಚೆಗೆ ಚುನಾವಣಾ ಪೂರ್ವ ಸಮೀಕ್ಷೆ ನಡೆದಿದೆ. ರಾಜ್ಯದ ಹಲವು ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ನಿಶ್ಚಿತವಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸಬೇಕು’ ಎಂದು ಹೇಳಿದರು.
ಮಠಾಧೀಶರೊಂದಿಗೆ ರಾಹುಲ್ ಸಭೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಠಾಧೀಶರೊಂದಿಗೆ ಆ.3ರಂದು ಸಭೆ ನಡೆಸಲಿದ್ದಾರೆ. ಮುರುಘಾ ಮಠದಲ್ಲಿ ಸಭೆ ನಿಗದಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.
‘ಎರಡು ದಿನಗಳ ಭೇಟಿಗೆ ರಾಜ್ಯಕ್ಕೆ ಬರುತ್ತಿರುವ ರಾಹುಲ್ ಗಾಂಧಿ ಅವರು ಆ.3ರಂದು ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ರಾಜ್ಯದ ಹಲವು ಮಠಾಧೀಶರೊಂದಿಗೆ ಸಂವಾದ ನಡೆಸಲಿದ್ದಾರೆ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಮಾದಾರ ಚನ್ನಯ್ಯ ಗುರುಪೀಠದಲ್ಲಿ ಇತ್ತೀಚೆಗೆ ದಲಿತ ಮತ್ತು ಹಿಂದುಳಿದ ಮಠಾಧೀಶರೊಂದಿಗೆ ಸಭೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.