ಬೆಂಗಳೂರು: ‘ಪಕ್ಷದ ಎಲ್ಲ ನಾಯಕರು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಮುಂದಿನ ಲೋಕಸಭೆ ಚುನಾವಣೆ ಗೆಲ್ಲಲು ಶ್ರಮಿಸಬೇಕು’ ಎಂದು ಹಿರಿಯ ಕಾಂಗ್ರೆಸ್ ನಾಯಕರು ಮಾಡಿದ ಭರ್ಜರಿ ಭಾಷಣದ ನಡುವೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಚ್.ಕೆ. ಪಾಟೀಲ ಶುಕ್ರವಾರ ಅಧಿಕಾರ ವಹಿಸಿಕೊಂಡರು.
ಅರಮನೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು, ‘ನಮ್ಮ ನಾಯಕರ ನಡುವೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರುವುದು ನಿಜ. ಈ ಭಿನ್ನಾಭಿಪ್ರಾಯಗಳನ್ನು ನಾಯಕರು ಮರೆಯದಿದ್ದರೆ ಕಾರ್ಯಕರ್ತರು ಒಗ್ಗೂಡುವುದು ಹೇಗೆ’ ಎಂದು ಕೇಳಿದರು.
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಬಂದಿದ್ದ ಕಾರ್ಯಕರ್ತರ ಘೋಷಣೆ, ಹರ್ಷೋದ್ಗಾರದ ನಡುವೆ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸಚಿವ ಡಿ.ಕೆ. ಶಿವಕುಮಾರ್ ಪಾಟೀಲರಿಗೆ ಪಕ್ಷದ ಧ್ವಜ ಹಸ್ತಾಂತರಿಸಿದರು.
ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಮಾತನಾಡಿ, ‘ನಮ್ಮ ನಾಯಕರು ಭಿನ್ನಾಭಿಪ್ರಾಯ ಮರೆತು, ಒಗ್ಗೂಡಿ ಕೆಲಸ ಮಾಡಿದರೆ ಎಲ್ಲ 28 ಲೋಕಸಭಾ ಕ್ಷೇತ್ರ ಗೆಲ್ಲಬಹುದು’ ಎಂದರು.
ಪ್ರಧಾನಿ ಮೋದಿ ಆಡಳಿತ, ರಫೇಲ್ ವಿಮಾನ ಹಗರಣ, ಜೆಡಿಎಸ್– ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ವಿವರಿಸಿ ತೀವ್ರ ವಾಗ್ದಾಳಿ ನಡೆಸಿದರು.‘ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಆಗಲಿದೆ. ಮೋದಿ ಅವರನ್ನು ಅಧಿಕಾರದಿಂದ ಕಿತ್ತೊಗೆಯಲು ಮೈತ್ರಿ ಅನಿವಾರ್ಯ’ ಎಂದುಪ್ರತಿಪಾದಿಸಿದರು.
‘ನಮ್ಮ ಪಕ್ಷದ ನಾಯಕರ ಮನೆಗಳ ಮೇಲೆ ಐ.ಟಿ, ಇ.ಡಿ, ಸಿಬಿಐ ದಾಳಿ ನಡೆಸುವ ಮೂಲಕ ಭಯ ಹುಟ್ಟಿಸಲಾಗುತ್ತಿದೆ. ಇಂಥ ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ ಎಂದು ಗುಡುಗಿದರು.
‘ಪ್ರಚಾರ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿಪಕ್ಷದ ಪರ ಪ್ರಚಾರ ಮಾಡುತ್ತೇವೆ’ ಎಂದು ಕೆಲವರು ವಾಗ್ದಾನ ಮಾಡಿದರು.
**
ನರೇಂದ್ರ ಮೋದಿ ಅವರಷ್ಟು ಸುಳ್ಳು ಹೇಳುವ,ನಾಟಕ ಮಾಡುವ ಪ್ರಧಾನಿಯನ್ನು ನಾನು ನೋಡಿಯೇ ಇಲ್ಲ. ಅವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ
– ಸಿದ್ದರಾಮಯ್ಯ, ಸಮನ್ವಯ ಸಮಿತಿ ಅಧ್ಯಕ್ಷ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.