ಬೆಂಗಳೂರು: ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದು ಮಾಡಿರುವುದು ಸರಿಯಲ್ಲ. ಈ ಕೂಡಲೇ ರದ್ದತಿ ಹಿಂಪಡೆದು ವೈದ್ಯಕೀಯ ಕಾಲೇಜಿಗೆ ಭೂಮಿ ಪೂಜೆ ಮಾಡಬೇಕುಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರುಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಡಿಕೆಶಿ, ‘ ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿರುವ ವಿಚಾರದಲ್ಲಿ ನನಗೆ ಯಾವುದೇ ತಕರಾರುಗಳಿಲ್ಲ. ಆದರೆ, ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದು ಮಾಡಿರುವುದು ಸರಿಯಲ್ಲ,’ ಎಂದು ಅವರು ಹೇಳಿದ್ದಾರೆ.
‘ಕನಕಪುರಕ್ಕೆ ಸಿಕ್ಕಿದ್ದ ವೈದ್ಯಕೀಯ ಕಾಲೇಜನ್ನು ರದ್ದು ಮಾಡಿದ ಆದೇಶ ಹಿಂದೆ ಪಡೆದು ಕೂಡಲೇ ಮಂಜೂರಾತಿ ಆದೇಶ ಹೊರಡಿಸಬೇಕು. ಅಲ್ಲದೆ, ವೈದ್ಯಕೀಯ ಕಾಲೇಜಿನ ಭೂಮಿ ಪೂಜೆಗೆ ದಿನಾಂಕ ನಿಗದಿ ಮಾಡಬೇಕು,’ ಎಂದು ಅವರು ಮನವಿ ಮಾಡಿದ್ದಾರೆ.
ಇದೇ ವಿಚಾರವಾಗಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಸ್ವತಃ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕನಕಪುರದ ವೈದ್ಯಕೀಯ ಕಾಲೇಜು ರದ್ದತಿ ವಿರುದ್ಧ ಈ ಹಿಂದೆಯೂ ಸರ್ಕಾರಕ್ಕೆ ಪತ್ರ ಬರೆದಿದ್ದ ಡಿ.ಕೆ ಶಿವಕುಮಾರ್ ‘ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಬೇಕು. ಇಲ್ಲವಾದಲ್ಲಿ ನನ್ನದೇ ರೀತಿಯಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.