ಬೆಂಗಳೂರು: ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಸಿದ್ದರಾಮಯ್ಯ ಪರ ಶಾಸಕರು ಪದೇ ಪದೇ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮನೆಯಲ್ಲಿ ಜಿ. ಪರಮೇಶ್ವರ ಮತ್ತು ಬಿ.ಕೆ. ಹರಿಪ್ರಸಾದ್ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಬಹುಮತ ಪಡೆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸುದೀರ್ಘ ಅವಧಿ ನಿಭಾಯಿಸಿರುವ ಪರಮೇಶ್ವರ ಅವರೂ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ. ಅಲ್ಲದೆ, ಪರಿಶಿಷ್ಟ ಸಮುದಾಯಕ್ಕೆ ಸೇರಿದವರು ಮುಖ್ಯಮಂತ್ರಿ ಆಗಬೇಕೆಂಬ ಕೂಗು ಮೊದಲಿನಿಂದಲೇ ಕಾಂಗ್ರೆಸ್ನಲ್ಲಿ ಇದ್ದು, ಇತ್ತೀಚಿನ ವರ್ಷಗಳಲ್ಲಿ ಮತ್ತಷ್ಟು ಬಲಗೊಳ್ಳುತ್ತಿದೆ. ಹೀಗಾಗಿ, ಮುಂದಿನ ಚುನಾವಣೆಯ ವೇಳೆಗೆ ‘ಪರಿಶಿಷ್ಟ ಜಾತಿಯ ಮುಖ್ಯಮಂತ್ರಿ’ ವಿಚಾರ ಮತ್ತೊಮ್ಮೆ ಮುಂಚೂಣಿಗೆ ಬಂದರೂ ಅಚ್ಚರಿ ಇಲ್ಲ ಎಂಬ ಮಾತು ಕಾಂಗ್ರೆಸ್ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.
ಪಕ್ಷದ ಹಿರಿಯ ನಾಯಕರೂ ಆಗಿರುವ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಮನೆಯಲ್ಲಿ ಇನ್ನೊಬ್ಬ ಹಿರಿಯ ನಾಯಕ ಹಾಗೂ ಹಲವು ವರ್ಷ ಹೈಕಮಾಂಡ್ ಮಟ್ಟದಲ್ಲಿ ಸಕ್ರಿಯವಾಗಿ ರಾಜಕೀಯ ನಡೆಸಿ ರಾಜ್ಯಕ್ಕೆ ಬಂದಿರುವ ಬಿ.ಕೆ. ಹರಿಪ್ರಸಾದ್ ಚರ್ಚೆ ನಡೆಸಿರುವುದು, ಪರಿಶಿಷ್ಟ ಜಾತಿಗೆ ಮುಖ್ಯಮಂತ್ರಿ ಪಟ್ಟ ಸಿಗಬೇಕು ಎಂಬ ವಿಚಾರ ಮತ್ತೆ ಮುಂಚೂಣಿಗೆ ತರುವ ಯತ್ನಕ್ಕೆ ಮುನ್ನುಡಿಯೇ ಎಂಬ ಚರ್ಚೆಗೂ ಕಾರಣವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.