ADVERTISEMENT

ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಮೋದಿ ಎದುರು ಬಿಲ ಸೇರುವುದೇಕೆ: ಸಿದ್ದರಾಮಯ್ಯ

ತೇಜಸ್ವಿ ಸೂರ್ಯಗೆ ಪ್ರಶ್ನೆಗಳ ಮಳೆಗರೆದ ವಿಧಾನಸಭೆ ಪ್ರತಿಪಕ್ಷ ನಾಯಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಮೇ 2021, 5:23 IST
Last Updated 5 ಮೇ 2021, 5:23 IST
ಸಿದ್ದರಾಮಯ್ಯ ಮತ್ತು ತೇಜಸ್ವಿ ಸೂರ್ಯ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ ಮತ್ತು ತೇಜಸ್ವಿ ಸೂರ್ಯ (ಸಂಗ್ರಹ ಚಿತ್ರ)   

ಬೆಂಗಳೂರು: ‘ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಇಲಿಯಂತೆ ಬಿಲ ಸೇರುವುದು ಯಾಕೆ. ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ಮೋದಿಯವರ ಅಚ್ಛೇ ದಿನ್ ತೇಜಸ್ವಿ ಸೂರ್ಯ ಅವರೇ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಬೆಡ್‌ ಬ್ಲಾಕಿಂಗ್‌ ದಂಧೆ ಕುರಿತು ಸಂಸದ ತೇಜಸ್ವಿ ಸೂರ್ಯ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆಯೂ ಸೇರಿದಂತೆ ಕೋವಿಡ್ ನಿರ್ವಹಣೆಗೆ ಸಂಬಂಧಿಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

‘ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಮಂದಿ ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ನರೇಂದ್ರ ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?’ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

‘ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು‌ ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ರಾಜ್ಯಕ್ಕೆ ವೆಂಟಿಲೇಟರ್,‌ ಐಸಿಯು,‌ ಆಕ್ಸಿಜನ್ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ಮೋದಿಯವರು ರಕ್ಷಿಸುತ್ತಿರುವುದು ಯಾರನ್ನು? ತಮ್ಮನ್ನೋ? ಅಧಿಕಾರಿಗಳನ್ನೋ?’ ಎಂದು ಅವರು ಪ್ರಶ್ನಿಸಿದ್ದಾರೆ.

‘ಕೇಂದ್ರ ಮತ್ತು ರಾಜ್ಯದಲ್ಲಿ‌ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತದೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ. ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ.‌ ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ಮೋದಿಯವರ ಅಚ್ಛೇ ದಿನ್ ತೇಜಸ್ವಿ ಸೂರ್ಯ ಅವರೇ?’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ‌‌ ಎಂಬುದನ್ನೂ ರಾಜ್ಯದ ಜನತೆಗೆ ತಿಳಿಸಿ ತೇಜಸ್ವಿ ಸೂರ್ಯ ಅವರೇ’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಯನ್ನು‌ ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ’ ಎಂದೂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

‘ಯಥಾ ರಾಜಾ ತಥಾ‌ ಮಂತ್ರಿ’, ‘ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ಮೋದಿ ಅವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ’ ಎಂದು ಇನ್ನೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ’ ಎಂದು ಪ್ರತಿಪಕ್ಷ ನಾಯಕ ಆಗ್ರಹಿಸಿದ್ದಾರೆ.

‘ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ಧಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್‌ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ’ ಎಂದು ಅವರು ಕುಹಕವಾಡಿದ್ದಾರೆ.

‘ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯಿತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು? ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ’ ಎಂದು ತೇಜಸ್ವಿ ಸೂರ್ಯ ಅವರನ್ನು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ತೇಜಸ್ವಿ ಸೂರ್ಯ, ರವಿಸುಬ್ರಹ್ಮಣ್ಯ, ಹಾಗೂ ಸತೀಶ್ ರೆಡ್ಡಿ‌ ಅವರೇ, ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ಧವಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು ರಾಜ್ಯ ಬಿಜೆಪಿ ಶಾಸಕರು‌, ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ?’ ಎಂದು ಅವರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.