ADVERTISEMENT

‘ಕೈ’ ನಾಯಕರ ಸಭೆ ಆರಂಭ: ಉಪ ಚುನಾವಣೆಗೆ ಕಾರ್ಯತಂತ್ರ ಚರ್ಚೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 6:58 IST
Last Updated 20 ಮಾರ್ಚ್ 2021, 6:58 IST
   

ಬೆಂಗಳೂರು: ಬೆಳಗಾವಿ ಲೋಕಸಭೆ ಕ್ಷೇತ್ರ, ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನಸಭೆ ಕ್ಷೇತ್ರಗಳಿಗೆ ಏ. 17ರಂದು ಉಪಚುನಾವಣೆ ನಡೆಯಲಿದ್ದು, ಕ್ಷೇತ್ರಗಳನ್ನು ಗೆಲ್ಲುವ ಕಾರ್ಯತಂತ್ರದ ಕುರಿತು ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಶನಿವಾರ ಬೆಳಿಗ್ಗೆ ಆರಂಭಗೊಂಡಿದೆ.

ಬಿಜೆಪಿ ತೊರೆದು ಬಂದಿರುವ ಬಸನಗೌಡ ತುರ್ವಿಹಾಳ ಅವರಿಗೆ ಮಸ್ಕಿ, ಹಾಲಿ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಬಸವಕಲ್ಯಾಣದ ಟಿಕೆಟ್‌ನ್ನು ಕಾಂಗ್ರೆಸ್‌ ನೀಡಿದೆ. ಜೆಡಿಎಸ್‌ ತೊರೆದು ಬಂದಿರುವ ಅಶೋಕ ಮನಗೂಳಿ ಅವರನ್ನು ಸಿಂದಗಿ ಕ್ಷೇತ್ರದಿಂದಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಈ ಕ್ಷೇತ್ರಕ್ಕೆ ಇನ್ನೂ ಉಪ ಚುನಾವಣೆ ಘೋಷಣೆ ಆಗಿಲ್ಲ. ಆದರೆ, ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನಷ್ಟೆ ಅಂತಿಮಗೊಳಿಸಬೇಕಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಧ್ರುವನಾರಾಯಣ್, ಶಾಸಕರಾದದ ಎಚ್.ಕೆ. ಪಾಟೀಲ, ಎಂ.ಬಿ. ಪಾಟೀಲ, ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್, ವಿಧಾನಸಭೆ ಮುಖ್ಯ ಸಚೇತಕ ಡಾ. ಅಜಯ್ ಸಿಂಗ್ ಮತ್ತಿತರರಿದ್ದಾರೆ.

ADVERTISEMENT

ಎಐಸಿಸಿ ವೀಕ್ಷಕರು ಸೇರಿದಂತೆ ಪಕ್ಷದ ಪ್ರಮುಖರು ಈ ಸಭೆಯುಲ್ಲಿದ್ದಾರೆ. ಅಲ್ಲದೆ, ಆಯಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿ ಹೊತ್ತಿರುವ ಮುಖಂಡರು, ಮಾಜಿ ಮಂತ್ರಿಗಳು, ಶಾಸಕರು, ಸಂಸದರು ಕೂಡಾ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.