ಸಿದ್ದರಾಮಯ್ಯ, ಡಿಕೆಶಿ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತಣ್ಣಗಾಗಿದ್ದರೂ ಕಾಂಗ್ರೆಸ್ ನಾಯಕರ ಗೋಪ್ಯ ಸಭೆಗಳು ಮತ್ತೆ ಮುಂದುವರಿದಿವೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಪ್ರಿಯಾಂಕ್ ಖರ್ಗೆ ಜತೆಗೆ ಅನೌಪಚಾರಿಕ ಸಭೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ..
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಮದುವೆಯೊಂದರಲ್ಲಿ ಭಾಗಿಯಾಗಿದ್ದರು. ಅದೇ ಮದುವೆ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಸಹ ಬಂದರು. ಪರಸ್ಪರ ಎದುರಾದ ಇಬ್ಬರು ನಾಯಕರೂ, ಪ್ರತ್ಯೇಕವಾಗಿ ಕುಳಿತು ಒಂದು ತಾಸಿಗೂ ಹೆಚ್ಚು ಮಾತುಕತೆ ನಡಸಿದ್ದಾರೆ ಎಂದು ಮೂಲಗಳು ಹೇಳಿವೆ.
ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನ್ನು ಇಬ್ಬರು ನಾಯಕರೂ ಖಚಿತಪಡಿಸಿದ್ದು, ಅದು ಆಕಸ್ಮಿಕ ಭೇಟಿ ಎಂದಷ್ಟೇ ಹೇಳಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಬಗ್ಗೆ ಚರ್ಚೆಯಾಗಿದೆ ಎಂದು ಮೂಲಗಳು ಹೇಳಿವೆ. ಆದರೆ ಇಬ್ಬರೂ, ಅಂತಹ ಚರ್ಚೆ ನಡೆದಿಲ್ಲ ಎಂದಿದ್ದಾರೆ.
ಇದರ ಬೆನ್ನಲ್ಲೇ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದ್ದರು. ಅಲ್ಲಿ ಇಬ್ಬರು ನಾಯಕರೂ ಒಂದು ತಾಸು ಮಾತುಕತೆ ನಡೆಸಿದರು. ಈ ವೇಳೆ ಯಾವೆಲ್ಲಾ ವಿಚಾರಗಳನ್ನು ಚರ್ಚಿಸಲಾಗಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
‘ನಾನು ಒಂದು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಡಿ.ಕೆ.ಶಿವಕುಮಾರ್ ಅವರೂ ಆ ಮದುವೆಗೆ ಬಂದಿದ್ದರು. ಅದೊಂದು ಆಕಸ್ಮಿಕ ಭೇಟಿ ಅಷ್ಟೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಅದು ಪೂರ್ವನಿಗದಿತ ಭೇಟಿ ಆಗಿರಲಿಲ್ಲ. ಅಚಾನಕ್ಕಾಗಿ ಸಿಕ್ಕಾಗ ಕೆಲಹೊತ್ತು ಮಾತನಾಡಿದೆವು ಅಷ್ಟೆ. ಸ್ವಲ್ಪ ಜಾಸ್ತಿಯೇ ಮಾತನಾಡಿರ ಬಹುದು. ಕೆಪಿಸಿಸಿ ಅಧ್ಯಕ್ಷ ಹುದ್ದೆ, ಬದಲಾವಣೆ ಬಗ್ಗೆ ಯಾವುದೇ ಮಾತು ಆಡಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.