ADVERTISEMENT

‘ಜನಧ್ವನಿ’: ಇಂಥಾ ಮಾನಗೆಟ್ಟ ಸರ್ಕಾರ ಬೇಕಾ?- ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 20:14 IST
Last Updated 3 ಮಾರ್ಚ್ 2021, 20:14 IST
ಬೆಂಗಳೂರಿನಿಂದ ಹೊರಟ ‘ಜನಧ್ವನಿ ಜಾಥಾ’. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಹನದಲ್ಲಿದ್ದಾರೆ –ಪ್ರಜಾವಾಣಿ ಚಿತ್ರ
ಬೆಂಗಳೂರಿನಿಂದ ಹೊರಟ ‘ಜನಧ್ವನಿ ಜಾಥಾ’. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಹನದಲ್ಲಿದ್ದಾರೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಆ ಸಚಿವ (ರಮೇಶ ಜಾರಕಿಹೊಳಿ) ರಾಜೀನಾಮೆ ಕೊಟ್ಟಿದ್ದಾನಂತೆ. ಆದರೆ, ಆತನ ಸಹೋದರ ಮುಖ್ಯಮಂತ್ರಿ ಬಳಿ ನಮ್ಮ ಅಣ್ಣನ ರಾಜೀನಾಮೆ ಪಡೆದುಕೊಂಡ್ರೆ ನಿಮ್ಮ ಸಿ.ಡಿ ರಿಲೀಸ್‌ ಮಾಡ್ತೀನಿಎಂದು ಹೇಳ್ತಾನಂತೆ. ಇಂಥ ಮಾನಗೆಟ್ಟ ಸರ್ಕಾರ ಬೇಕಾ?’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಆಕ್ರೋಶ ಹೊರಹಾಕಿದರು.

ದೇವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ‘ಜನಧ್ವನಿ‘ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅದನ್ನು (ಸಿ.ಡಿ) ನೋಡೋಕೆ ನನಗೆ ಅಸಹ್ಯವಾಗುತ್ತದೆ. ಹೇಳುವುದಕ್ಕೂ ನಾಚಿಕೆಯಾಗುತ್ತದೆ. ಈಗ ಆ ಸಚಿವ ರಾಜೀನಾಮೆ ಕೊಟ್ಟಿದ್ದಾನಂತೆ’ಎಂದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಬಡವರಿಂದ ಸುಲಿಗೆ ಮಾಡುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಮೇಲೆ ಕಾಳಜಿ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ’ ಎಂದರು.

ADVERTISEMENT

’ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮಟ್ಟಿದೆ. ಇಬ್ಬರು ಮುಖ್ಯಮಂತ್ರಿಗಳನ್ನಿಟ್ಟುಕೊಂಡು ಸರ್ಕಾರ ನಡೆಸಲಾಗುತ್ತಿದೆ. ಒಬ್ಬ ಯಡಿಯೂರಪ್ಪ, ಮತ್ತೊಬ್ಬ ವಿಜಯೇಂದ್ರ’ ಎಂದೂವ್ಯಂಗ್ಯವಾಡಿದರು.

ಕಾಂಗ್ರೆಸ್‌ನಿಂದ ‘ಜನಧ್ವನಿ‘: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಾಭಿಪ್ರಾಯ ರೂಪಿಸಿ, ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಮುಂದಾಗಿರುವ ಕೆಪಿಸಿಸಿ, ಪಕ್ಷದ ಶಾಸಕರು ಇಲ್ಲದ ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರದಿಂದ (ಮಾರ್ಚ್‌ 3) ‘ಜನ ಧ್ವನಿ’ ಜಾಥಾ ಹಮ್ಮಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬುಧವಾರ ಜಾಥಾ
ನಡೆಯಿತು.

ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ ಜಾಥಾಕ್ಕೆ ಚಾಲನೆ ನೀಡಲಾಯಿತು. ಈ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ,ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಈಶ್ವರ ಖಂಡ್ತೆ, ರಾಮಲಿಂಗಾರೆಡ್ಡಿ, ಧ್ರುನಾರಾಯಣ್ ಇದ್ದರು. ಆದರೆ, ಇನ್ನೊಬ್ಬ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ
ಗೈರಾದರು.

ಬಳಿಕ ವಿಶೇಷ ವಾಹನದಲ್ಲಿ ಕಾಂಗ್ರೆಸ್ ನಾಯಕರು ದೇವನಹಳ್ಳಿಗೆ ಪ್ರಯಾಣ ಬೆಳೆಸಿದರು. ಅಲ್ಲಿ ಮೆರವಣಿಗೆ ಮೂಲಕ ಜನನಿಬಿಡ ಪ್ರದೇಶದಲ್ಲಿ ಸಾಗಿದರು. ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಜನಜಾಗೃತಿ ಜಾಥಾ ನಡೆಸಿದರು.ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಲು ಡೊಳ್ಳು ಕುಣಿತ ಸೇರಿದಂತೆ ಹಲವು ಜನಪದ ಕಲೆಗಳ ಪ್ರದರ್ಶನವೂಇತ್ತು.

***
ಜನರ ನಡುವೆ ಇರಬೇಕು. ಜನರ ಭಾವನೆ ತಿಳಿಯಬೇಕು. ಅವರ ಬದುಕು ಉಳಿಸಬೇಕು ಎನ್ನುವ ಕಾರಣಕ್ಕೆ ಜನಧ್ವನಿ ಯಾತ್ರೆ ಹಮ್ಮಿಕೊಂಡಿದ್ದೇವೆ

- ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

***

ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ನೀಡಿದ್ದ ಭರವಸೆ ಈಡೇರಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ

- ಸಿದ್ದರಾಮಯ್ಯ, ವಿಧಾನಸಭಾ ವಿರೋಧ ಪಕ್ಷದ ನಾಯಕ

***

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.