ಬೆಂಗಳೂರು: ವಿಧಾನಸಭೆ ಉಪ ಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ಸ್ಥಾನ ಗೆಲ್ಲಲೇಬೇಕು ಎಂಬ ಗುರಿಯೊಂದಿಗೆ ಕಾಂಗ್ರೆಸ್ ಮುಖಂಡರು, ಅ. 15ರಂದು ಅಭ್ಯರ್ಥಿ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಮಾತುಕತೆ ನಡೆ ಸಲಿದ್ದಾರೆ.
ದೆಹಲಿಯಿಂದ ಬರಲಿರುವ ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವ ವಹಿಸಲಿದ್ದು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ನೇಮಕ ಗೊಂಡಿರುವ ಉಸ್ತುವಾರಿ ಮುಖಂ ಡರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಪಕ್ಷದ ಹಿರಿಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಉಪಚುನಾವಣೆ ದಿನಾಂಕ ಮುಂದೂಡುವ ಮುನ್ನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯೊಂದನ್ನು ಸಿದ್ಧಪಡಿಸಲಾಗಿತ್ತು. ಇದರಲ್ಲಿ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಹೊಸಕೋಟೆ, ಹಿರೇಕೆರೂರು, ಗೋಕಾಕ್, ಕಾಗವಾಡ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಲಿದೆ.
ಈ ನಾಲ್ಕು ಕ್ಷೇತ್ರಗಳಲ್ಲಿಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಬಿಜೆಪಿ ಅಭ್ಯರ್ಥಿಗಳು, ಟಿಕೆಟ್ಗೆ ಬೇಡಿಕೆ ಸಲ್ಲಿಸಿದ್ದಾರೆ. ಅನರ್ಹ ಶಾಸಕರಿಗೆ ಟಿಕೆಟ್ ಕೊಡುವ ಅನಿವಾರ್ಯತೆಗೆ ಸಿಲುಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಂಡಾಯ ತೋರುತ್ತಿರುವವ ರನ್ನು ಸಮಾಧಾನಪಡಿಸಲು ನಿಗಮ, ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕಮಾಡಿದ್ದರು. ಆದರೆ ಅಧಿಕಾರದ ಬದಲು ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಬೇಡಿಕೆ ಸಲ್ಲಿಸಿದ್ದಾರೆ. ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಕಡೆಗೆ ಹೋಗುವುದಾಗಿ ಪಕ್ಷದ ಮುಖಂಡರಿಗೆಎಚ್ಚರಿಸಿದ್ದಾರೆ .
ಹೊಸಕೋಟೆ ಕ್ಷೇತ್ರದಲ್ಲಿ ಸೋತಿದ್ದ ಸಂಸದ ಬಿ.ಎನ್.ಬಚ್ಚೇಗೌಡ ಪುತ್ರ ಶರತ್, ಹಿರೇಕೆರೂರು ಕ್ಷೇತ್ರದಲ್ಲಿ ಯು.ಬಿ.ಬಣಕಾರ, ಗೋಕಾಕ್ನಲ್ಲಿ ಅಶೋಕ್ ಪೂಜಾರಿ, ಕಾಗವಾಡದಲ್ಲಿ ರಾಜುಕಾಗೆ ಸ್ಪರ್ಧೆಗೆ ಮುಂದಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ಗೆ ಬರುವ ಸಾಧ್ಯತೆ ಇದೆ. ಹೊಸಕೋಟೆ, ಹಿರೇಕೆರೂರು ಕ್ಷೇತ್ರದಲ್ಲಿ ಕಾಂಗ್ರೆಸ್ಗೂ ಸಮರ್ಥ ಅಭ್ಯರ್ಥಿಗಳಿಲ್ಲ. ಹಾಗಾಗಿ ವಲಸೆ ಬರುವವರನ್ನು ಸೇರಿಸಿಕೊಂಡು ಟಿಕೆಟ್ ನೀಡಬೇಕೆ? ಅವರನ್ನು ಸೇರಿಸಿಕೊಳ್ಳುವುದರಿಂದ ಸ್ಥಳೀಯ ಮಟ್ಟದಲ್ಲಿ ಆಗುವ ಪರಿಣಾಮಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ನಾಲ್ಕೈದು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತದೆ. ಮುಂದಿನ ಬೆಳವಣಿಗೆ ನೋಡಿಕೊಂಡು ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.