ADVERTISEMENT

ಈ ತಿಂಗಳಲ್ಲಿ ಜಿಲ್ಲಾಮಟ್ಟದ ಕಾಂಗ್ರೆಸ್‌ ಚಿಂತನಾ ಶಿಬಿರ: ಡಿಕೆಶಿ ಪತ್ರ

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 20:14 IST
Last Updated 5 ಜೂನ್ 2022, 20:14 IST
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌    

ಬೆಂಗಳೂರು: ‘ಪಕ್ಷ ಸಂಘಟನೆ, ಜಿಲ್ಲೆಯ ರಾಜಕೀಯ ಸ್ಥಿತಿಗತಿ ಅವಲೋಕನ, ಮುಂಬರುವ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ಉದ್ದೇಶದಿಂದ ಜೂನ್‌ 11ರಿಂದ 14ರ ಮಧ್ಯೆ ಯಾವುದಾದರೂ ಒಂದು ದಿನ ಜಿಲ್ಲಾಮಟ್ಟದಲ್ಲಿ ‘ನವ ಸಂಕಲ್ಪ ಚಿಂತನಾ ಶಿಬಿರ’ ಆಯೋಜಿಸುವಂತೆ ಪಕ್ಷದ ಕಾರ್ಯಾಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಘಟಕಗಳ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಪತ್ರ ಬರೆದಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಹೊಂದಿರುವ ಕೆಪಿಸಿಸಿ ಪದಾಧಿಕಾರಿಗಳು, ಸ್ಥಳೀಯ ನಾಯಕರು ಚರ್ಚಿಸಿ ಶಿಬಿರದ ದಿನ ನಿಗದಿಪಡಿಸಬೇಕು. ಜಿಲ್ಲೆಗೆ ಸಂಬಂಧಿಸಿ ರಾಜ್ಯ ನಾಯಕರು, ಜಿಲ್ಲೆಯ ಎಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು, ಶಾಸಕರು, ಮಾಜಿ ಶಾಸಕರು. ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಗಳು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಾಜಿ, ಹಾಲಿ ಸೇರಿದಂತೆ ಜಿಲ್ಲೆಯ ಪ್ರಮುಖ ಎಲ್ಲ ನಾಯಕರು ಶಿಬಿರದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದೂ ಅವರು ಸೂಚಿಸಿದ್ದಾರೆ.

‘ಜಿಲ್ಲಾ, ಬ್ಲಾಕ್‌ಮಟ್ಟದಲ್ಲಿ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರಲ್ಲಿರುವ ಸಣ್ಣಪುಟ್ಟ ಗೊಂದಲ, ಮನಸ್ತಾಪ, ಭಿನ್ನಭಿಪ್ರಾಯಗಳಿದ್ದರೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಸ್ವಾತಂತ್ರ್ಯದ 75ನೇ ವರ್ಷದ ಸಂಭ್ರಮವನ್ನು ಆಚರಿಸಲು ಜಿಲ್ಲಾಮಟ್ಟದಲ್ಲಿ ಆಗಸ್ಟ್‌ 9ರಿಂದ 14ರ ಒಳಗೆ 75 ಕಿಲೋ ಮೀಟರ್‌ ಪಾದಯಾತ್ರೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ಯಾತ್ರೆಯ ರಾಜ್ಯಮಟ್ಟದ ಸಮಾರೋಪ ಆಗಸ್ಟ್‌ 15ರಂದು ಬೆಂಗಳೂರಿನಲ್ಲಿ ಆಚರಿಸಲಾಗುವುದು’ ಎಂದೂ ಶಿವಕುಮಾರ್‌ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.