ADVERTISEMENT

ಕಾಂಗ್ರೆಸ್‌ನಿಂದ ಸಂಸತ್ತಿನ ದುರ್ಬಳಕೆ: ಡಿ.ವಿ. ಸದಾನಂದ ಗೌಡ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 22:42 IST
Last Updated 7 ಆಗಸ್ಟ್ 2021, 22:42 IST
ಡಿ.ವಿ. ಸದಾನಂದ ಗೌಡ
ಡಿ.ವಿ. ಸದಾನಂದ ಗೌಡ    

ಬೆಂಗಳೂರು: ಪೆಗಾಸಸ್ ಗೂಢಚರ್ಯೆ ಆರೋಪವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷವು ಸಂಸತ್ತನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಆರೋಪಿಸಿದರು.

ಸಂಸದರಾದ ಪಿ.ಸಿ. ಮೋಹನ್ ಮತ್ತು ತೇಜಸ್ವಿ ಸೂರ್ಯ ಅವರೊಂದಿಗೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಸಂಕಷ್ಟದ ನಡುವೆಯೇ ಕೇಂದ್ರ ಸರ್ಕಾರ ಸಂಸತ್ ಅಧಿವೇಶನ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರು ಸಂಸತ್ತನ್ನೇ ಅವಮಾನಿಸುತ್ತಿದ್ದಾರೆ’ ಎಂದು ದೂರಿದರು.

ಪೆಗಾಸಸ್ ಗೂಢಚರ್ಯೆ ಆರೋಪದಲ್ಲಿ ಹುರುಳಿಲ್ಲ. ಅದು ಕೂಡ ‘ಟೂಲ್ ಕಿಟ್‌’ನಂತಹ ಪ್ರಯತ್ನದ ಭಾಗ. ಅದನ್ನೆ ಬಳಸಿಕೊಂಡು ಸಂಸತ್ ಕಲಾಪಕ್ಕೆ ಅಡ್ಡಿಪಡಿಸಲು ಕಾಂಗ್ರೆಸ್ ಜುಲೈ 19ರಿಂದಲೇ ಪ್ರಯತ್ನ ಆರಂಭಿಸಿತ್ತು. ಕೋವಿಡ್‌ ಬಿಕ್ಕಟ್ಟಿನ ನಡುವೆಯೂ ಸಂಸತ್‌ ಅಧಿವೇಶನಕ್ಕೆ ಒತ್ತಾಯಿಸಿದ್ದ ಕಾಂಗ್ರೆಸ್‌ ಮುಖಂಡರೇ ಈಗ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ಪಲಾಯನವಾದದ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ವಿರೋಧ ಪಕ್ಷಗಳು ಸಂಸತ್ ಅಧಿವೇಶನವನ್ನು ಸರಿಯಾಗಿ ಬಳಸಿಕೊಳ್ಳಬೇಕಿತ್ತು. ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿ, ಕೋವಿಡ್‌ ಬಿಕ್ಕಟ್ಟು ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯ ಪಟ್ಟಿಯಲ್ಲಿದ್ದವು. ಹಿಂದೆ ರಫೇಲ್‌ ಹಗರಣದ ಹೆಸರಿನಲ್ಲಿ ಕಾಂಗ್ರೆಸ್‌ ಸದಸ್ಯರು ಸಂಸತ್ತಿನಲ್ಲಿ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದ್ದರು. ಈಗಲೂ ಅದೇ ರೀತಿ ಆಗುತ್ತಿದೆ ಎಂದು ಟೀಕಿಸಿದರು.

ಆಗಸ್ಟ್ 13ರವರೆಗೂ ಸಂಸತ್ ಕಲಾಪ ನಡೆಸುವುದು ನಿಶ್ಚಿತ. ಯಾವುದೇ ರೀತಿಯ ಒತ್ತಡಗಳಿಗೂ ಕೇಂದ್ರ ಸರ್ಕಾರ ಮಣಿಯುವುದಿಲ್ಲ‌. ಜನಪರವಾದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆ ಮುಂದುವರಿಯಲಿದೆ. ಮುಂದಿನ ಒಂದು ವಾರವಾದರೂ ಕಾಂಗ್ರೆಸ್‌ ಸಂಸದರು ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಆಗ್ರಹಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ಪಡೆಯಲು ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿಯ ಎಲ್ಲ ಸಂಸದರ ಬೆಂಬಲವಿದೆ. ಎಲ್ಲರೂ ಒಗ್ಗೂಡಿ ಯೋಜನೆಯ ಪರವಾಗಿ ಹೋರಾಟ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.