ಬೆಂಗಳೂರು: ವಿಧಾನ ಪರಿಷತ್ ಸದಸ್ಯರೂ ಆಗಿರುವ ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರನ್ನು ಸೋಮವಾರ ಭೇಟಿಮಾಡಿ ಮಾತುಕತೆ ನಡೆಸಿದರು.
ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಇಬ್ರಾಹಿಂ, ಗೌಡರೊಂದಿಗೆ ಕೆಲಕಾಲ ಚರ್ಚೆ ನಡೆಸಿದರು. ಜೆಡಿಎಸ್ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಶಾಸಕ ಆರ್. ಮಂಜುನಾಥ್, ಮಾಜಿ ಶಾಸಕ ಸಿ.ಬಿ. ಸುರೇಶ್ ಬಾಬು ಈ ಸಂದರ್ಭದಲ್ಲಿ ಇದ್ದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿದ್ದ ಇಬ್ರಾಹಿಂ, ಕೆಲವು ದಿನಗಳಿಂದ ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಕಾಂಗ್ರೆಸ್ ತೊರೆಯುವ ಸಿದ್ಧತೆಯಲ್ಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಚಾಲ್ತಿಯಲ್ಲಿದೆ. ಕೆಲವು ದಿನಗಳ ಹಿಂದೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರೊಂದಿಗೆ ದೇವೇಗೌಡರನ್ನು ಭೇಟಿಮಾಡಿ ಮಾತುಕತೆ ನಡೆಸಿದ್ದರು. ಕುಮಾರಸ್ವಾಮಿ ಅವರು ಇತ್ತೀಚೆಗೆ ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿನೀಡಿ ಚರ್ಚಿಸಿದ್ದರು.
‘ಸೋಮವಾರ ದೇವೇಗೌಡರನ್ನು ಭೇಟಿಯಾಗಿರುವುದಕ್ಕೆ ವೈಯಕ್ತಿಕ ಕಾರಣಗಳಿಲ್ಲ. ಅವರ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಮಂಗಳವಾರ ವಿಧಾನ ಪರಿಷತ್ನಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆಯಾಗಿ, ಚರ್ಚೆಗೆ ಬರಲಿದೆ. ಮಸೂದೆಯನ್ನು ವಿರೋಧಿಸುವ ತೀರ್ಮಾನಕ್ಕೆ ಜೆಡಿಎಸ್ ಬೆಂಬಲ ನೀಡುವಂತೆ ಅವರಿಗೆ ಮನವಿ ಮಾಡಿದ್ದೇನೆ’ ಎಂದು ಇಬ್ರಾಹಿಂ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.