ಬೆಂಗಳೂರು: ‘ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ಸಚಿವರು, ಶಾಸಕರಿಗೆ ಪಾಕಿಸ್ತಾನದ ಮೇಲೇಕೆ ಇಷ್ಟು ಪ್ರೀತಿ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಪ್ರಶ್ನಿಸಿದರು.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಾಕಿಸ್ತಾನದಲ್ಲಿ ಭಾರತೀಯ ಸೇನೆ ದಾಳಿ ನಡೆಸಿದೆ ಎಂಬುದನ್ನು ಆ ದೇಶವೇ ಹೇಳಿಕೊಂಡಿದೆ. ಉಗ್ರ ಅಜರ್ ಮಸೂದ್ ಅವರ ಕುಟುಂಬಕ್ಕೆ ಪಾಕಿಸ್ತಾನ ಸರ್ಕಾರ ಪರಿಹಾರ ನೀಡಿದೆ. ಅಂಥದ್ದರಲ್ಲಿ ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಸೇನಾ ಕಾರ್ಯಾಚರಣೆಗೆ ಸಾಕ್ಷ್ಯ ಕೇಳುತ್ತಿದ್ದಾರೆ’ ಎಂದರು.
‘ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಮತ್ತು ಕೋಲಾರ ಶಾಸಕ ಮಂಜುನಾಥ್ ಅವರು ಪಾಕಿಸ್ತಾನದ ಪರವಾಗಿ ಮಾತನಾಡುತ್ತಿದ್ದಾರೆ. ಭಯೋತ್ಪಾದಕರ ಗುಂಡಿಗೆ ಬಲಿಯಾದ ಸಾಮಾನ್ಯ ಜನರು, ಸೇನಾ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೈನಿಕರ ಜೀವಗಳಿಗೆ ಇವರು ಬೆಲೆ ನೀಡುವುದಿಲ್ಲವೇ’ ಎಂದು ಪ್ರಶ್ನಿಸಿದರು.
‘ಇವರಿಗೆಲ್ಲಾ ಪಾಕಿಸ್ತಾನದ ಮೇಲೆ ಏಕೆ ಇಷ್ಟು ಪ್ರೀತಿ ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.