ಕಲಬುರಗಿ: ‘ರಾಜ್ಯದಲ್ಲಿ ಬಿಜೆಪಿ ನೇತೃತ್ವದ 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು ಕಿತ್ತೊಗೆಯುವುದೇ ಕಾಂಗ್ರೆಸ್ ಆದ್ಯತೆಯಾಗಿದೆ. ಜನರೂ ಈ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದಿಂದ ರೋಸಿ ಹೋಗಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಭಿಪ್ರಾಯಪಟ್ಟರು.
‘ಬಸವರಾಜ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪ್ರತಿ ನೇಮಕಾತಿಗಳಲ್ಲಿ ಹಣ ಇಲ್ಲದೇ ಕೆಲಸ ಆಗದು ಎಂಬ ಪರಿಸ್ಥಿತಿ ತಲೆದೋರಿದೆ. ಡಿಜಿಪಿ ಹಂತದ ಅಧಿಕಾರಿಯೇ ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಜೈಲಿಗೆ ಹೋಗಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.
‘ರಾಜ್ಯಕ್ಕೆ ಬರಬೇಕಿದ್ದ ಉದ್ಯಮ ಗಳು ಚೆನ್ನೈ, ಹೈದರಾಬಾದ್ನತ್ತ ಮುಖ ಮಾಡಿವೆ. ರಾಜ್ಯದ ವಿವಿಧ ಇಲಾಖೆ ಗಳಲ್ಲಿ ಖಾಲಿಯಿರುವ ಲಕ್ಷಾಂತರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಜನರ ಏಳ್ಗೆಗೆ 371 (ಜೆ) ಕಲಂ ಜಾರಿಗೊಳಿಸಲು ಶ್ರಮಿಸಿದರು. ಆದರೆ, ಇದನ್ನು ಸಹಿಸದ ಬಿಜೆಪಿ ಇಲ್ಲಿನ ಜನರಿಗೆ ಉದ್ಯೋಗ ನೀಡುತ್ತಿಲ್ಲ ’ ಎಂದರು.
‘ಬಡ ಮಕ್ಕಳ ಅನುಕೂಲಕ್ಕೆ ಇದ್ದ ವಿದ್ಯಾರ್ಥಿವೇತನವನ್ನು ರದ್ದು ಗೊಳಿಸಿನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರಿ ಅನ್ಯಾಯ ಮಾಡಿದೆ’ ಎಂದರು.
----
ಕಾಂಗ್ರೆಸ್ನ ಪ್ರತಿಯೊಬ್ಬ ಕಾರ್ಯಕರ್ತರೂ ಸಿಎಂ ಅಭ್ಯರ್ಥಿಯೇ ಆಗಿದ್ದಾರೆ. ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿಲ್ಲ.
- ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.