ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
(ಸಂಗ್ರಹ ಚಿತ್ರ)
ಬೆಂಗಳೂರು: ‘ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ. ಈ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ. ನಾನು, ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಮಾತಿಗೆ ಬದ್ಧವಾಗಿ ನಡೆಯುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
'ಮುಂದಿನ ವರ್ಷಗಳಲ್ಲೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುವ ಭರವಸೆ ಇದೆ' ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ, ಕುಣಿಗಲ್ ಶಾಸಕ ರಂಗನಾಥ್ ಅವರ ಪ್ರತಿಕ್ರಿಯೆಗಳಿಗೆ ಉತ್ತರ ನೀಡಿದ ಅವರು, 'ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಾಯಕರ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ' ಎಂಬ ಮಾತನ್ನು ಸಿದ್ದರಾಮಯ್ಯ ಅವರೂ ಹೇಳಿದ್ದಾರೆ ಎಂದರು.
'ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದರೂ ಕೆಲವು ಮಾಧ್ಯಮಗಳು ಬೇರೆ ರೀತಿ ಬರೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೇಳಿರುವ ಮಾತು ಅಂತಿಮ. ಈ ವಿಚಾರವಾಗಿ ಯಾರೂ ಚರ್ಚೆ ಮಾಡುವಂತಿಲ್ಲ. ಈ ವಿಚಾರವಾಗಿ ಚರ್ಚೆ ಮಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ. ಸಿದ್ದರಾಮಯ್ಯ ಪರವಾಗಿ ಮಾತನಾಡಿದರೂ, ನನ್ನ ಪರವಾಗಿ ಮಾತನಾಡಿದರೂ ಪಕ್ಷಕ್ಕೆ ಹಾನಿ ಮಾಡಿದಂತೆ. ಅಧಿಕಾರ ಹಂಚಿಕೆ ಕುರಿತು ಮಾತನಾಡುವ ಹಕ್ಕು ಯಾರಿಗೂ ಇಲ್ಲ. ಶಾಸಕ ರಂಗನಾಥ್, ಎಲ್.ಆರ್.ಶಿವರಾಮೇಗೌಡ ಸೇರಿದಂತೆ ಈ ವಿಚಾರವಾಗಿ ಯಾರೆಲ್ಲಾ ಮಾತನಾಡಿದ್ದಾರೋ ಅವರಿಗೆ ನೋಟಿಸ್ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್ ಅವರಿಗೆ ಸೂಚಿಸಿದ್ದೇನೆ. ಶಿಸ್ತು ಇಲ್ಲವಾದರೆ ಪಕ್ಷ ಉಳಿಯುವುದಿಲ್ಲ. ನಾವು ಪಕ್ಷ ಹೇಳಿದಂತೆ ನಡೆಯುವ ಶಿಸ್ತಿನ ಸಿಪಾಯಿಗಳು' ಎಂದು ಹೇಳಿದರು.
ಪಕ್ಷಕ್ಕಾಗಿ ದುಡಿದವರನ್ನು ನಿಗಮ–ಮಂಡಳಿಗಳಿಗೆ ನೇಮಕ ಮಾಡಲಾಗಿದೆ. 650 ನಿರ್ದೇಶಕರ ಪಟ್ಟಿ ಸಿದ್ಧವಾಗುತ್ತಿದೆ. ಎರಡು ವರ್ಷಗಳ ನಂತರ ಇತರರಿಗೆ ಅಧಿಕಾರ ಬಿಟ್ಟುಕೊಡಬೇಕು. ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಹಂಚಿಕೆಗೆ ಪ್ರೋತ್ಸಾಹ ನೀಡುತ್ತೇನೆ. ಈ ಹಂಚಿಕೆ ಕೇವಲ ನಿಗಮ ಮಂಡಳಿ ವಿಚಾರದಲ್ಲಿ ಮಾತ್ರ. ಸರ್ಕಾರದ ಮಟ್ಟದಲ್ಲಿ ಅಲ್ಲ ಎಂದು ಸ್ಪಷ್ಟನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.