ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ.
ಇತ್ತೀಚೆಗೆ ನಡೆದಿದ್ದ ಮಡಿಕೇರಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಮಾತ್ರ ಗಳಿಸಿತ್ತು. ಜೊತೆಗೆ, ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲೂ ಕಾಂಗ್ರೆಸ್ ಬೆಂಬಲಿತರು ನಿರೀಕ್ಷಿತ ಪ್ರಮಾಣದಲ್ಲಿ ಗೆಲುವು ಸಾಧಿಸರಿಲ್ಲ. ಇದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಮಂಜುನಾಥ ಕುಮಾರ್ ಅವರನ್ನು ಬದಲಾವಣೆ ಮಾಡಬೇಕು ಎಂಬ ಕೂಗು ಕಳೆದ ಒಂದು ವರ್ಷದಿಂದ ಎದ್ದಿತ್ತು. ಪಕ್ಷದ ಒಂದು ಗುಂಪಿನ ಸದಸ್ಯರು, ಕುಶಾಲನಗರ ಹಾಗೂ ಸೋಮವಾರಪೇಟೆಯಲ್ಲಿ, ರೆಸಾರ್ಟ್ವೊಂದರಲ್ಲಿ ಸಭೆ ನಡೆಸಿದ್ದರು. ವರಿಷ್ಠರಿಗೂ ಪತ್ರ ಬರೆದು ಮಂಜುನಾಥ್ ಅವರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿದ್ದರು. ಸದ್ಯಕ್ಕೆ ಜಿಲ್ಲಾ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ವರಿಷ್ಠರು ಹೇಳಿದ್ದರು. ಅದಾದ ಮೇಲೆ ಸಭೆ ನಡೆಸಿದ್ದ ಮುಖಂಡರು ಸುಮ್ಮನಿದ್ದರು. ಇದೀಗ ಮಂಜುನಾಥ್ ಅವರೇ ರಾಜೀನಾಮೆ ನೀಡಿದ್ದಾರೆ.
ನಗರ ಅಧ್ಯಕ್ಷರೂ ಗರಂ: ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೀನಾಯ ಸೋಲಾದ ಮೇಲೆ ಕೆಲವರು ಜಿಲ್ಲಾ ಅಧ್ಯಕ್ಷರ ವಿರುದ್ಧ ಆರೋಪ ಮಾಡಿದ್ದರು. ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಲು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ ಕುಮಾರ್ ಹಾಗೂ ಖಜಾಂಚಿ ಎಚ್.ಎಂ.ನಂದಕುಮಾರ್ ಕಾರಣ ಎಂದು ಕೆ.ಯು.ಅಬ್ದುಲ್ ರಜಾಕ್ ಆರೋಪಿಸಿದ್ದರು.
ನಗರದ 22 ವಾರ್ಡ್ಗಳಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆಯನ್ನು ಮಂಜುನಾಥಕುಮಾರ್ ಹಾಗೂ ನಂದಕುಮಾರ್ ಅವರೇ ಹೊರಬೇಕೆಂದು ಅಬ್ದುಲ್ ರಜಾಕ್ ಒತ್ತಾಯಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.