ಬೆಂಗಳೂರು: ‘ಡಿನೋಟಿಫಿಕೇಷನ್ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಕಾಂಗ್ರೆಸ್ ಬೆಂಗಳೂರು ನಗರ ಪ್ರಚಾರ ಸಮಿತಿ ಸದಸ್ಯರು ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
‘ಡಿನೋಟಿಫಿಕೇಷನ್ ಹಗರಣಗಳ ಮೂಲಕ ಯಡಿಯೂರಪ್ಪ ಈ ಹಿಂದೆ ಜೈಲುಪಾಲಾಗಿದ್ದರು. ಈಗ ಅವರು ಮತ್ತೆ ಭೂ ಕಂಟಕದಲ್ಲಿ ಸಿಲುಕಿದ್ದಾರೆ. ಆದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಅವರ ಭ್ರಷ್ಟಾಚಾರಕ್ಕೆ ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವರು ಸಹಕಾರ ನೀಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ದೂರಿದರು.
‘ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ಇದರಲ್ಲಿ ಮೋದಿಯವರ ಪಾಲು ಎಷ್ಟೆಂದು ಬಹಿರಂಗಪಡಿಸಬೇಕು’ ಎಂದರು.
‘ಡಿನೋಟಿಫಿಕೇಷನ್ ಹಗರಣದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆಸಿರುವ ಪಕ್ಷ ಬಿಜೆಪಿ. ಭ್ರಷ್ಟಾಚಾರಕ್ಕೆ ಬೆಂಬಲವಿದ್ದರೆ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಬೇಕು. ಇಲ್ಲದಿದ್ದರೆ, ಯಡಿಯೂರಪ್ಪ ಅವರಿಂದ ರಾಜೀನಾಮೆ ಕೊಡಿಸಬೇಕು’ ಎಂದೂ ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡರಾದ ಜನಾರ್ದನ್, ಆನಂದ್, ಶೇಖರ್, ಸಲೀಮ್, ಪ್ರಕಾಶ್ ಉಮೇಶ್, ಪುಟ್ಟರಾಜು, ಶಶಿಭೂಷಣ್ ಹಾಗೂ ಇತರರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.