ADVERTISEMENT

ಕಾಂಗ್ರೆಸ್‌ನಿಂದ ರಾಜಭವನ ಚಲೋ ಇಂದು

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 19:41 IST
Last Updated 19 ಜನವರಿ 2021, 19:41 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ಮೂರು ಕರಾಳ ಕಾಯ್ದೆಗಳನ್ನು ವಾಪಸು ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮತ್ತು ರಾಜ್ಯದಲ್ಲಿ ಕೊರೊನಾ ಪರಿಹಾರ ಹಣ ನೀಡದಿರುವುದು, ಬೆಲೆ ಏರಿಕೆ, ತೆರಿಗೆ ಏರಿಕೆಯಂಥ ಜನವಿರೋಧಿ ನೀತಿಯನ್ನು ಪ್ರತಿಭಟಿಸಿ ಪಕ್ಷದ ವತಿಯಿಂದ ಬುಧವಾರ (ಜ. 20) ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾವು ರೈತರ ಪರವಾಗಿ ನಿಲ್ಲುತ್ತೇವೆ. ಕರಾಳ ಕಾಯ್ದೆ ಕಿತ್ತುಹಾಕಬೇಕು ಎಂಬುದು ರೈತರ ಬೇಡಿಕೆ. ಅವರ ಬೇಡಿಕೆ ಈಡೇರುವವರೆಗೆ ನಾವು ಅವರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ’ ಎಂದರು.

‘ಪಕ್ಷದ ಕಾರ್ಯಕರ್ತರು ಶಿಸ್ತಿನಿಂದ ಪ್ರತಿಭಟನೆ ನಡೆಸಲಿದ್ದಾರೆ. ಎಲ್ಲ ವಾಹನಗಳು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಂದು, ಅಲ್ಲಿಂದ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನಕ್ಕೆ ಹೋಗಲಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಿದ್ದೇವೆ’ ಎಂದರು.

ADVERTISEMENT

ಮರಾಠಾ ಅಭಿವೃದ್ಧಿ ಪ್ರಾಧಿಕಾರ ಠಾಕ್ರೆಗೆ ಪ್ರೇರಣೆ: ‘ರಾಜ್ಯದ ಗಡಿ ವಿಚಾರ ಮುಗಿದ ಅಧ್ಯಾಯ. ಎಲ್ಲವೂ ಸರಿಯಾಗಿ ಇತ್ಯರ್ಥವಾಗಿದೆ. ಉದ್ಧವ್ ಠಾಕ್ರೆ ಹೇಳಿಕೆ ರಾಜಕೀಯ ಪ್ರೇರಿತ. ರಾಜ್ಯ ಸರ್ಕಾರ ಅನಗತ್ಯವಾಗಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನಿಸಿದ್ದೆ ಠಾಕ್ರೆ ಹೇಳಿಕೆಗೆ ಪ್ರೇರಣೆ' ಎಂದು ಶಿವಕುಮಾರ್ ಆರೋಪಿಸಿದರು.

ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ: ಸಚಿವ ಯೋಗೇಶ್ವರ್ ವಿರುದ್ಧ ಬಿಜೆಪಿ ನಾಯಕರು ಮಾಡಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು, 'ಈ ವಿಚಾರದಲ್ಲಿ ಅವರು ಮಾಹಿತಿ ಇಟ್ಟುಕೊಂಡು ಮಾತನಾಡುತ್ತಿದ್ದಾರೆ. ನನಗೂ ಕೆಲವು ವಿಚಾರಗಳು ಗೊತ್ತಿವೆ. ಆ ಬಗ್ಗೆ ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.